ಬೀದರ್: ಬೆಂಗಳೂರಲ್ಲಿ ಬೃಹತ್ ಶಕ್ತಿ ಪ್ರದರ್ಶನದ ಬಳಿಕ ಈಗ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬೀದರ್ ನಲ್ಲಿ ಜೊತೆಯಾಗಲಿದ್ದಾರೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಜೊತೆ ಮೆರವಣಿಗೆ ಮೂಲಕ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮ್ಯ ಇಬ್ಬರೂ ಪಾಲ್ಗೊಳ್ಳಲಿದ್ದಾರೆ.
ನ್ಯಾಷನಲ್ ಕಾಲೇಜ್ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಏರ್ಪಡಿಸಲಾಗಿದೆ. ಉಮೇದುವಾರಿಕೆ ಬಳಿಕ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆಯುವ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹಿಮ್ ಖಾನ್ ಮತ್ತು ಬಂಡೆಪ್ಪ ಕಾಶೆಂಪೂರ್ ಕೂಡಾ ಸಾಥ್ ನೀಡಲಿದ್ದಾರೆ. ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಸುವ ವೇಳೆ ಸಮ್ಮಿಶ್ರ ಸರ್ಕಾರದ ಶಕ್ತಿ ಪ್ರದರ್ಶನ ತೋರಿಸಲು ಮುಂದಾಗಿದ್ದು, ಮೆರವಣಿಗೆಯಲ್ಲಿ 50 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ.