ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ಎನ್ನಲಾಗಿದ್ದು, ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರೊಂದಿಗೆ ನಡೆದ ಸಭೆಯ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ರಮೇಶ್ ಅವರ ಆತ್ಮಹತ್ಯೆ ಬಗ್ಗೆ ನನಗೆ ಮಾಹಿತಿ ಲಭಿಸಿದೆ. ಆತ್ಮಹತ್ಯೆಗೂ ಮುನ್ನ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರು ಎಂದು ತಿಳಿದಿದ್ದೇನೆ. ಅಲ್ಲದೇ 2-3 ದಿನಗಳಿಂದ ಐಟಿ ಅಧಿಕಾರಿಗಳು ವಿಚಾರಣೆ ಮಾಡುವ ವೇಳೆ ಕಿರುಕುಳ ನೀಡಿದ್ದು, ಈ ಕಿರುಕುಳ ತಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಅವರ ಕುಟುಂಬಕ್ಕೆ ಸಾಂತ್ವನವನ್ನು ಹೇಳುತ್ತೇನೆ. ಅವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.
ನಾನು ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವ ಬಗ್ಗೆ ಯಾವುದೇ ಆಕ್ಷೇಪವನ್ನು ವ್ಯಕ್ತಪಡಿಸುತ್ತಿಲ್ಲ. ಆದರೆ ರಾಜಕೀಯ ದುರುದ್ದೇಶದಿಂದ ಕೇವಲ ಕಾಂಗ್ರೆಸ್ ಪಕ್ಷದ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂಬುವುದು ನನ್ನ ಅಭಿಪ್ರಾಯವಾಗಿದೆ. ಕಾಂಗ್ರೆಸ್ ನಾಯಕರು ಮಾತ್ರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರಾ? ಬಿಜೆಪಿಯ ಯಾವುದೇ ನಾಯಕರು ಶಿಕ್ಷಣ ಸಂಸ್ಥೆಗಳನ್ನು ಹೊಂದಿಲ್ಲವಾ ಎಂದು ಪ್ರಶ್ನೆ ಮಾಡಿದರು.
https://www.youtube.com/watch?v=h8eKCo5zXfI
ಇದೇ ವೇಳೆ 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದ್ದು, ಚುನಾವಣೆ ಎದುರಿಸಲು ಬೇಕಾದ ಹೆಚ್ಚಿನ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದು, ಗೆಲುವಿನ ದೃಷ್ಟಿಯಿಂದ ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆಗೆ ಕೈಗೊಳ್ಳ ಬೇಕಾದ ಮತ್ತಷ್ಟು ಕಾರ್ಯಕ್ರಮಗಳ ಬಗ್ಗೆ ಈ ವೇಳೆ ಚರ್ಚೆ ನಡೆಸಿದ್ದೇವೆ ಎಂದರು. ಸಭೆಯಲ್ಲಿ ದಿನೇಶ್ ಗುಂಡೂರಾವ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಶಿವಶಂಕರರೆಡ್ಡಿ, ವಿ.ಮುನಿಯಪ್ಪ, ಆರ್.ವಿ.ದೇವರಾಜ್, ಟಿ.ಬಿ.ಜಯಚಂದ್ರ, ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಅಶೋಕ್ ಪಟ್ಟಣ್, ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್ ಸೇರಿ ಹಲವರು ಭಾಗಿಯಾಗಿದ್ದರು.
ಇತ್ತ ರಮೇಶ್ ಆತ್ಮಹತ್ಯೆ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ. ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ? ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ” ಎಂದು ಬರೆದುಕೊಂಡಿದೆ.
ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ.
ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ?
ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ.
ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಓಂ ಶಾಂತಿ. pic.twitter.com/1Zo1sSzbfV
— Karnataka Congress (@INCKarnataka) October 12, 2019