ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಹೇಳಿಕೆಯಿಂದಾಗಿ ಕಾಂಗ್ರೆಸ್ ಪಕ್ಷ ಮತ್ತೆ ಪುಟಿದೇಳುವ ಎಲ್ಲಾ ಮುನ್ಸೂಚನೆಗಳು ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಭೀಮಣ್ಣ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ಕೊಡುಗು ಜಿಲ್ಲೆಗೆ ಕಾಂಗ್ರೆಸ್ ವತಿಯಿಂದ ಎಲ್ಲಾ ಶಾಸಕರುಗಳು ತಮ್ಮ 2 ತಿಂಗಳ ಸಂಬಳದ ಜೊತೆಗೆ, ವಿಧಾನ ಪರಿಷತ್ ಸದಸ್ಯರ 5 ಲಕ್ಷ ರೂಪಾಯಿ ಹಾಗೂ ರಾಜ್ಯಸಭಾ ಸದಸ್ಯರ 25 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 10 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿ ಸಿಎಂ ಪರಿಹಾರ ನಿಧಿಗೆ ನೀಡಲಾಗುತ್ತದೆ. ಅಲ್ಲದೇ ಕೇಂದ್ರ ಸರ್ಕಾರ ಪರಿಹಾರವನ್ನು ನೀಡುವುದಕ್ಕೆ ಮೀನಾಮೇಷ ಮಾಡದೇ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ಹೀಗಾಗಿ ಕೂಡಲೇ ಹೆಚ್ಚಿನ ಪರಿಹಾರವನ್ನು ಕೊಡಗಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿದರು.
ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಹೇಳಿಕೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುಟಿದೇಳುವ ಎಲ್ಲಾ ಮುನ್ಸೂಚನೆಗಳು ಕಂಡುಬರುತ್ತಿದ್ದು, ಅವರ ಹೇಳಿಕೆಯಿಂದಾಗಿ ಕಾರ್ಯಕರ್ತರುಗಳು ಮತ್ತಷ್ಟು ಉತ್ಸುಕರಾಗಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ
ಸದ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಮಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಚುನಾವಣೆಗಳ ಫಲಿತಾಂಶಗಳೇ ನಮಗೆ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ. ಈಗಾಗಲೇ ನಾವು ಎಲ್ಲೇ ಪ್ರಚಾರಕ್ಕೂ ಹೋದರೂ ಕಾಂಗ್ರೆಸ್ಸಿನ ಅಲೆ ಎದ್ದು ಕಾಣುತ್ತಿದೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯು ನಮಗೆ ಸವಾಲಿನ ವಿಷಯವಾಗಿದ್ದು, ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಗೆದ್ದು, ಲೋಕಸಭೆಗೆ ಹೆಚ್ಚಿನ ಸದಸ್ಯರನ್ನು ಕಳುಹಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ. ಪಕ್ಷಗಳಲ್ಲಿ ಒಳ ಒಪ್ಪಂದ ಹಾಗೂ ಪಕ್ಷ ವಿರೋಧ ಚಟುವಟಿಕೆಗಳು ಕಂಡು ಬಂದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv