ಬೆಂಗಳೂರು: ವಿಧಾನ ಸಭೆ ಅಧಿವೇಶನದ ಆರಂಭದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಕ್ಷದ ಸಚಿವರು ಹಾಗೂ ನಾಯಕರಿಗೆ ಔತಣಕೂಟ ಏರ್ಪಡಿಸಿದ್ದು, ನಗರ ಕಾವೇರಿ ನಿವಾಸದಲ್ಲಿ ನಾಳೆ ಭೋಜನ ಕೂಟ ನಡೆಯಲಿದೆ.
ಫೆ.06 ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕೈಗೊಂಡಿದ್ದಾರೆ ಎನ್ನಲಾದ ಆಪರೇಷನ್ ಕಮಲದ ಸುದ್ದಿಯ ಬಗ್ಗೆಯು ಈ ಔತಣಕೂಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಔತಣಕೂಟ ಏರ್ಪಡಿಸುವ ಮೂಲಕ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇದರ ಮತ್ತೊಂದು ಉದ್ದೇಶವಾಗಿದೆ ಎನ್ನಲಾಗಿದೆ.
ಸಿಎಂ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್ಗೆ ಅನುಮೋದನೆ ಹಾಗೂ ಒಂದೊಮ್ಮೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಮಂಡಿಸಿದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಸಚಿವರು, ಮುಖಂಡರು ಹಾಗೂ ಶಾಸಕರಿಗೆ ಔತಣಕೂಟಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಪತ್ರ ಬರೆದು ಆಹ್ವಾನ ನೀಡಿದ್ದಾರೆ.
ಸಭೆಯಲ್ಲಿ ಭಾಗವಹಿಸುವ ಶಾಸಕರನ್ನು ಆಯಾ ಜಿಲ್ಲಾ ಉಸ್ತುವಾರಿ ಸಚಿವರು ವಿಶ್ವಾಸಕ್ಕೆ ತೆಗೆದುಕೊಂಡು ಅಗತ್ಯ ಮಾಹಿತಿ ಪಡೆಯಬೇಕಿದೆ. ಸಭೆಯಲ್ಲಿ ಬಂಡಾಯದ ವರ್ತನೆ ತೋರಿರುವ ಹಾಗೂ ಸರಿಯಾಗಿ ಸಂಪರ್ಕಕ್ಕೆ ಸಿಗದೆ ಇರುವ ಶಾಸಕರ ಮೇಲೆ ಹೆಚ್ಚಿನ ನಿಗಾ ವಹಿಸಿ ಅಸಮಾಧಾನವನ್ನು ಪರಿಹಾರ ಮಾಡುವ ಕಾರ್ಯ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.
ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕೂಡ ಪಕ್ಷದ ಎಲ್ಲಾ ನಾಯಕರು ಹಾಗೂ ಶಾಸಕರು ಬೆಂಗಳೂರಿಗೆ ಆಗಮಿಸಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬಿಜೆಪಿ ನಾಯಕರ ಈ ನಡೆ ಆಪರೇಷನ್ ಕಮಲ ಚುರುಕುಗೊಂಡಿದೇಯಾ ಎಂಬ ಅನುಮಾನ ಮೂಡಲು ಕಾರಣವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv