ನವದೆಹಲಿ: ಇಮ್ರಾನ್ ಖಾನ್ ರ ಪ್ರಧಾನಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧುರವರು ಪಾಕಿಸ್ತಾನಕ್ಕೆ ತೆರಳಿದ್ದೆ ಆದರೆ ಅವರನ್ನು ದೇಶದ್ರೋಹಿಯನ್ನಾಗಿ ಪರಿಗಣಿಸಲಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಇದೇ ಆಗಸ್ಟ್ 18ರಂದು ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ನೂತನ ಪ್ರಧಾನಮಂತ್ರಿ ಇಮ್ರಾನ್ ಖಾನ್ರ ಪ್ರಮಾಣವಚನ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಕುರಿತು, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕೇಂದ್ರ ಗೃಹ ಇಲಾಖೆ ಹಾಗೂ ಪಂಜಾಬ್ ಸರ್ಕಾರಕ್ಕೆ ಅನುಮತಿಯನ್ನು ಕೋರಿದ್ದರು.
ಪಾಕಿಸ್ತಾನಕ್ಕೆ ತೆರಳಲು ಅನುಮತಿ ಕೋರಿರುವ ಸಿಧುರವರ ವಿರುದ್ಧ ಹರಿಹಾಯ್ದಿರುವ ಸುಬ್ರಮಣಿಯನ್ ಸ್ವಾಮಿಯವರು, ಸಿಧುರವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ ಪಾಕಿಸ್ತಾನಕ್ಕೆ ಹೋಗಲು ಉತ್ಸುಕರಾಗಿದ್ದಾರೆ. ಒಂದು ವೇಳೆ ಅವರು ಪಾಕಿಸ್ತಾನಕ್ಕೆ ಹೋಗಿದ್ದೆ ಆದಲ್ಲಿ, ಅವರು ತಮ್ಮ ರಾಜಕೀಯ ಭವಿಷ್ಯವನ್ನು ಹಾಳುಮಾಡಿಕೊಳ್ಳುವಲ್ಲಿ ಯಾವುದೇ ಸಂದೇಹವಿಲ್ಲ. ಈ ವಿಷಯದ ಕುರಿತು ಭಾರತೀಯರು ಅವರನ್ನು ದೇಶದ್ರೋಹಿ ಎಂದು ತಿಳಿದು, ಎಂದಿಗೂ ಕ್ಷಮಿಸುವುದಿಲ್ಲವೆಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ನವಜೋತ್ ಸಿಂಗ್ ಸಿಧು ಸೇರಿದಂತೆ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಹಾಗೂ ಬಾಲಿವುಡ್ನ ಪ್ರಮುಖ ನಟರುಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv