-ಜುಲೈ ತಿಂಗಳಲ್ಲಿ ನಿತ್ಯ ಸರಾಸರಿ ಉತ್ಪಾದನೆ 84.34 ದಶಲಕ್ಷ ಯೂನಿಟ್ಗೆ ಏರಿಕೆ
-ಮುಂದಿನ ದಿನಗಳಲ್ಲಿ ಪ್ರತಿನಿತ್ಯ 100 ದಶಲಕ್ಷ ಯೂನಿಟ್ ಉತ್ಪಾದನೆಗೆ ಸಿದ್ಧತೆ
-ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಇನ್ನಷ್ಟು ಸಮರ್ಪಕಗೊಳಿಸುವ ನಿಟ್ಟಿನಲ್ಲಿ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆ ಶಾಖೋತ್ಪನ್ನ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ (KJ George) ತಿಳಿಸಿದ್ದಾರೆ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ರಾಜ್ಯದಲ್ಲಿ ಜಲ ವಿದ್ಯುತ್ ಮತ್ತು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ವಹಿಸುತ್ತಿದ್ದು, ಜಲಾಶಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸುಸ್ಥಿತಿಯಲ್ಲಿಟ್ಟು ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆಯನ್ನು ಪ್ರತಿನಿತ್ಯ 100 ದಶಲಕ್ಷ ಯೂನಿಟ್ ಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ವಿದ್ಯುತ್ ಉತ್ಪಾದನೆ ಕುರಿತಂತೆ ಈಗಾಗಲೇ ಕೆಪಿಸಿಎಲ್ನ ಪ್ರಗತಿ ಪರಿಶೀಲನೆ ನಡೆಸಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ – ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ
ಈ ಬಾರಿ ಮಳೆಗಾಲದಲ್ಲಿ, ಅದರಲ್ಲೂ ಮುಖ್ಯವಾಗಿ ಜುಲೈ ತಿಂಗಳಲ್ಲಿ ರಾಜ್ಯದ ಮೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಅಗತ್ಯ ಕಲ್ಲಿದ್ದಲು ಪೂರೈಕೆ ಜೊತೆಗೆ ವಿದ್ಯುತ್ ಉತ್ಪಾದನೆಯಲ್ಲೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ನಿತ್ಯ ಸರಾಸರಿ 54.47 ದಶಲಕ್ಷ ಯೂನಿಟ್ ಉತ್ಪಾದನೆ ಮಾಡಲಾಗಿತ್ತು ಎಂದಿದ್ದಾರೆ.
ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಕಾರಣ ಪೂರೈಕೆಗೆ ಸಮಸ್ಯೆಯಾಗದಂತೆ ಮುಕ್ತ ಮಾರುಕಟ್ಟೆಯಿಂದ ವಿದ್ಯುತ್ ಖರೀದಿಸಬೇಕಾಗುತ್ತದೆ. ಇದರಿಂದ ಸರ್ಕಾರದ ಬೊಕ್ಕಸದ ಮೇಲೆ ಹೊರೆ ಬೀಳುತ್ತದೆ. ಇದನ್ನು ತಪ್ಪಿಸಿ ರಾಜ್ಯದಲ್ಲೇ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲು ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸನ್ನದ್ಧಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, 152 ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ ಬಾಂಬ್
ಶಾಖೋತ್ಪನ್ನ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ:
ಈ ವರ್ಷದ ಜುಲೈ ತಿಂಗಳಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಜುಲೈ ತಿಂಗಳಲ್ಲಿ ಸರಾಸರಿ 24.45 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ಸರಾಸರಿ 13.12 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿತ್ತು. ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ 33.64 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಸರಾಸರಿ 25.35 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿತ್ತು.
ಯರಮರಸ್ ಶಾಖೋತ್ಪನ್ನ ಸ್ಥಾವರದಲ್ಲಿ ಸರಾಸರಿ 26.25 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಸರಾಸರಿ 16 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಬಗ್ಗೆ ಮಾತಾಡೋ ಯೋಗ್ಯತೆ ಕಾಂಗ್ರೆಸ್ಗಿಲ್ಲ: ಆರ್.ಅಶೋಕ್
ಕಲ್ಲಿದ್ದಲು ಸಂಗ್ರಹ ಹೆಚ್ಚಳ
ಶಾಖೋತ್ಪನ್ನ ಕೇಂದ್ರಗಳಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲು ಕಲ್ಲಿದ್ದಲು ಸಂಗ್ರಹ ಹೆಚ್ಚಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ವಹಿಸಲಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ 12 ದಿನಕ್ಕೆ ಬೇಕಾಗುವ ಕಲ್ಲಿದ್ದಲು ಸಂಗ್ರಹವಿತ್ತು. ಜುಲೈ ತಿಂಗಳಲ್ಲಿ 15 ದಿನಕ್ಕೆ ಬೇಕಾಗುವ ಕಲ್ಲಿದ್ದಲು ಸಂಗ್ರಹವಾಗಿದೆ. ಜೊತೆಗೆ ಕಲ್ಲಿದ್ದಲು ಸಂಗ್ರಹವನ್ನು 20 ದಿನಕ್ಕೆ ಬೇಕಾಗುವಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದ್ದು, ದಿನಕ್ಕೆ 17ರಿಂದ 18 ರೇಕ್ ಕಲ್ಲಿದ್ದಲು ತರಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ʻಪ್ರೇಮದ ಊರಲಿʼ ಏರುಪೇರು ಹೃದಯ ಸಾಂಗ್ ರೀಲಿಸ್
