ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ರಮೇಶ್ ಕುಮಾರ್ ಅವರ ರಾಜೀನಾಮೆಯಿಂದ ಸ್ಪೀಕರ್ ಸ್ಥಾನ ತೆರವವಾಗಿದೆ. ಹೀಗಾಗಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಗೆ ಆಗಮಿಸಿದ ಆಡಳಿತ ಪಕ್ಷ ಬಿಜೆಪಿಯ ವಿಶ್ವೇಶರ ಹೆಗಡೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಸಿ.ಟಿ.ರವಿ, ಸುರೇಶ್ ಕುಮಾರ್, ಮಾಧುಸ್ವಾಮಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ಸ್ಪೀಕರ್ ಸ್ಥಾನದ ಮೂಚೂಣಿಯಲ್ಲಿ ಬಿಜೆಪಿ ಮೂವರ ಹಿರಿಯ ಶಾಸಕರಾದ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕೆ.ಜಿ.ಬೋಪಯ್ಯ ಅವರ ಹೆಸರು ಕೇಳಿ ಬಂದಿತ್ತು. ಈಗಾಗಲೇ ಈ ಜವಾಬ್ದಾರಿ ನಿರ್ವಹಿಸಿದ್ದ ಕೆ.ಜಿ.ಬೋಪಯ್ಯನವರಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ ಅವರು ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಹೀಗಾಗಿ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆಯ್ಕೆ ಮಾಡುವಂತೆ ಸೂಚನೆ ನೀಡಿತ್ತು ಎಂದು ಮೂಲಗಳು ತಿಳಿಸಿವೆ.