ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಅಂತರ ಕಾಯ್ದುಕೊಂಡು ಕ್ಯಾಬಿನೆಟ್ ಸಭೆ ನಡೆಸಿದ್ದಾರೆ.
ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಿತು.
ಮಂಗಳವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ಸಾಮಾಜಿಕ ಆಂತರ ಕಾಯ್ದುಕೊಳ್ಳಿ. ಮನೆಯಿಂದ ಹೊರಬರಬೇಡಿ ಎಂದು ಮನವಿ ಮಾಡಿದ್ದರು. ಭಾಷಣದಲ್ಲಿ ಹೇಳಿದಂತೆ ಪ್ರಧಾನಿ ಮೋದಿ ಇಂದು ಸಾಮಾಜಿಕ ಅಂತರ ಕಾಯ್ದುಕೊಂಡು ಕ್ಯಾಬಿನೆಟ್ ಸಭೆ ನಡೆಸಿದರು.
ತಮ್ಮ ಭಾಷಣದಲ್ಲಿ ಸಾಮಾಜಿಕ ಅಂತರವನ್ನು ಕೇವಲ ರೋಗಿಗಳು ಮಾತ್ರ ಪಾಲಿಸುವುದಲ್ಲ. ಎಲ್ಲರೂ ಪಾಲಿಸಲೇಬೇಕು. ಇದು ನನಗೂ ಅನ್ವಯವಾಗುತ್ತದೆ ಎಂದು ತಿಳಿಸಿದ್ದರು.
ಮೂಲಗಳ ಪ್ರಕಾರ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಸಭೆ ಮಾಡಲು ಮುಂದಾಗಿದ್ದರು. ಆದರೆ ಇದು ಸರಿ ಆಗುವುದಿಲ್ಲ ಎನ್ನುವ ಕಾರಣಕ್ಕೆ ದೂರ ದೂರ ಕುರ್ಚಿಗಳನ್ನು ಇರಿಸಿ ಸಭೆ ನಡೆಸಿದ್ದಾರೆ.
ಈಗಾಗಲೇ ಭಾರತದಲ್ಲಿ 530 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 11 ಮಂದಿ ಮೃತಪಟ್ಟಿದ್ದಾರೆ.