ಚಿಕ್ಕಮಗಳೂರು: ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಚಾರ್ಮಾಡಿ ಘಾಟ್ನಲ್ಲಿ ರಸ್ತೆಗೆ ಅಡ್ಡಲಾಗಿ ಮಣ್ಣು ಕುಸಿದು ಬಿದ್ದಿದ್ದು, ವಾಹನ ಸಂಚಾರ ಬಂದ್ ಆಗಿದೆ.
ಚಾರ್ಮಾಡಿ ಘಾಟ್ನಲ್ಲಿ ರಾತ್ರಿಯಿಡೀ ಮಣ್ಣು ತೆರವು ಕಾರ್ಯಾಚರಣೆ ನಡೆಯಿತು. ಹಾಗಾಗಿ ಎಸ್ಕೆ ಬಾರ್ಡರ್, ಕುದುರೆಮುಖ ಮೂಲಕ ಪರ್ಯಾಯ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಮಂಗಳೂರಿನಿಂದ ಬರುವ ವಾಹನಗಳಿಗೆ ಧರ್ಮಸ್ಥಳ, ಉಜಿರೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.
ಬೆಂಗಳೂರು- ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳಿಗೆ ಕೊಟ್ಟಿಗೆಹಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳೆಲ್ಲಾ ಜಲಾವೃತಗೊಂಡಿದೆ.
ಈ ಹಿನ್ನೆಲೆ ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪದ ಶಾಲಾ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಿಸಲಾಗಿದೆ.