ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಬಳಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಚಿದಾನಂದ ಮಠಪತಿ(25) ಮೃತ ಯೋಧ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಾಳಟ್ಟಿ ಗ್ರಾಮದ ಮೂಲದವರಾಗಿದ್ದ ಚಿದಾನಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಚಿದಾನಂದ ರಜೆ ಮೇಲೆ ಊರಿಗೆ ಬಂದಿದ್ದರು. ಆದರೆ ಇಂದು ಚಿದಾನಂದ ಬೈಕಿನಲ್ಲಿ ಮಧುರಖಂಡಿ ಕ್ರಾಸ್ ಬಳಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ಅಪಘಾತವಾಗಿದೆ. ಪರಿಣಾಮ ಚಿದಾನಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.