ಕೋಲಾರ: ನಗರದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ವೇದಿಕೆ ಮೇಲೆಯೇ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು ಹಾಕಿದ್ದಾರೆ.
ಕೋಲಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕುರುಬರ ಸಂಘದ ವತಿಯಿಂದ ನಗರದ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಅದ್ಧೂರಿ ಕನಕ ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ರಮೇಶ್ ಕುಮಾರ್ ಅವರು ಭಾವುಕರಾದರು. ಅಲ್ಲದೇ ಸಿದ್ದರಾಮಯ್ಯನವರ ಸೋಲು ನನ್ನ ಸಾವಿಗಿಂತ ಹೆಚ್ಚು ನೋವುಂಟು ಮಾಡಿದೆ ಎಂದು ಹೇಳಿ ಕಣ್ಣೀರು ಹಾಕಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡಿದ್ದೆ. ಆದರೆ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲು ಅನುಭವಿಸಿದರು. ಸಿದ್ದರಾಮಯ್ಯ ಅವರು ಸೋತಿದ್ದು ತುಂಬಾ ದು:ಖವಾಯಿತು. ಒಬ್ಬ ಕುರಿಕಾಯೋ ಸಮಾಜದಲ್ಲಿ ಹುಟ್ಟಿ 13 ಬಾರಿ ಬಜೆಟ್ ಮಂಡಿಸಿದ ಧೀಮಂತ ನಾಯಕ ಸಿದ್ದರಾಮಯ್ಯ. ಅವರನ್ನ ಏಕವಚನದಲ್ಲಿ ಮಾತನಾಡಿಸುವವರಿಗೆ ತಕ್ಕ ಪಾಠ ಕಲಿಸಿ ಎಂದು ಹೇಳುವ ಮೂಲಕ ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್ ಅವರಿಗೆ ರಮೇಶ್ ಕುಮಾರ್ ಟಾಂಗ್ ನೀಡಿದರು.
ಸಮಾಜದಲ್ಲಿ ಎಲ್ಲಾ ವರ್ಗದವರ ಒಳಿತಿಗಾಗಿ ಸಿದ್ದರಾಮಯ್ಯ ಅವರು ಶ್ರಮಿಸಿದ್ದಾರೆ. ಅವರ ಆಡಳಿತದಲ್ಲಿ ಯಾರಿಗೂ ಅನ್ಯಾಯ ಮಾಡದೇ ಯಶಸ್ವಿಯಾಗಿ ಸರ್ಕಾರ ನಡೆಸಿದ್ದಾರೆ. ಇಂತಹ ಧೀಮಂತ ನಾಯಕನನ್ನು ಕೆಳಗೆ ಬೀಳಲು ಬಿಡಬಾರದು ಎಂದು ಮನವಿ ಮಾಡಿಕೊಂಡರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv