ಮೈಸೂರು: ಆಷಾಡ ಮಾಸದ ಮೊದಲ ಶುಕ್ರವಾರ ಇಂದು. ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಶುರುವಾಗಿವೆ.
ಈಗಾಗಲೇ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಮಾಡಲಾಗಿದೆ. ಖಾಸಗಿ ವಾಹನಗಳಲ್ಲಿ ಬರುವವರು ಲಲಿತ ಮಹಲ್ ಹೆಲಿಪ್ಯಾಡ್ ಬಳಿ ವಾಹನಗಳ ನಿಲುಗಡೆ ಮಾಡಲು ವ್ಯವಸ್ಥೆ ಮಾಡಿ, ಅಲ್ಲಿಂದ ಉಚಿತವಾಗಿ ನಗರಸಾರಿಗೆ ಬಸ್ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬರಲು ವ್ಯವಸ್ಥೆ ಮಾಡಲಾಗಿದೆ.
ಇಂದು ಬೆಳಗಿನ ಜಾವ 3 ಗಂಟೆಯಿಂದ ಸಂಚಾರ ಆರಂಭಿಸಿರುವ ಬಸ್ಗಳು ರಾತ್ರಿ 11ರ ವರೆಗೂ ಕಾರ್ಯನಿರ್ವಹಿಸಲಿವೆ. ಇನ್ನು ಬೆಟ್ಟದಲ್ಲಿ ದೇವರ ದರ್ಶನಕ್ಕೆ ಎರಡು ದ್ವಾರಗಳಿಂದ ಪ್ರವೇಶ ಕಲ್ಪಿಸಿದ್ದು, ಎಲ್ಲೆಡೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಅನ್ನದಾನಕ್ಕಾಗಿ ವಿಶೇಷ ವೇದಿಕೆ ಸಿದ್ಧಪಡಿಸಲಾಗಿದ್ದು, ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲಾಗಿದೆ.
ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕಾಗಿ ರಾಜ್ಯದ ವಿವಿಧೆಡೆಗಳಿಂದ ಅಲ್ಲದೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.