ಬಳ್ಳಾರಿ: ಅಧಿಕಾರ ಇರುವಷ್ಟು ದಿನ ನೀವು ಮತ್ತು ನಿಮ್ಮ ಕುಟುಂಬದವರು ಉದ್ಧಾರ ಆಗಿ, ನೂರು ವರ್ಷ ಬದುಕಿ ಬಾಳಿ ಎಂದು ಶಾಸಕ ಶ್ರೀರಾಮುಲು, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡುವ ಮೂಲಕ ಹಾರೈಸಿದ್ದಾರೆ.
ಕಾಂಗ್ರೆಸ್ ನವರು ಶಕ್ತಿವಂತರು ಅಂತ ಅವರು ತಿಳಿದಿರಬಹುದು. ಆದರೆ ನನಗೆ ಆ ಶಕ್ತಿಯನ್ನು ಜನರೇ ಕೊಟ್ಟಿದ್ದಾರೆ. ನಮ್ಮ ಪಕ್ಷದ ಶಾಸಕರನ್ನೇ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಸಚಿವ ಸ್ಥಾನದ ಆಮೀಷ ಒಡ್ಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಹಾಗು ಜೆಡಿಎಸ್ ಮಾಡುತ್ತಿದೆ. ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಮಾಡುವ ಮೂಲಕ ಹಣ ಮಾಡಿಕೊಳ್ಳುತ್ತಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.
- Advertisement 2
- Advertisement 3
ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಕುಮಾರಸ್ವಾಮಿ ಎರಡು ಮುಖ್ಯಮಂತ್ರಿ ಆದ್ರೂ ಜನರಿಗೆ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಲು ವಿಫಲವಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಸಿಎಂ ಮಾತಿಗೆ ಬೆಲೆ ಕೊಡುತ್ತಿಲ್ಲ. ಅಧಿಕಾರಕ್ಕೆ ಬಂದಾಗಿನಿಂದ ನಾಡಿನ ಜನರನ್ನು ಕನಫ್ಯೂಸ್ ಮಾಡುವಲ್ಲಿ ಸರ್ಕಾರ ನಿರತವಾಗಿದೆ. ಮೈತ್ರಿ ಸರ್ಕಾರದಲ್ಲಿಯೇ ಅಸಮಾಧಾನದ ಹೊಗೆ ಕಾಣುತ್ತಿದ್ದು, ಲೋಕಸಭೆ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
- Advertisement 4
ಮೂರು ಜಿಲ್ಲೆಗಳಿಗೆ ಕಡಿಮೆ ಅವಧಿಗೆ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಾಣಲಿದೆ. ಬಳ್ಳಾರಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆ ನಡೆಯುತ್ತಿದ್ದು, ನಮ್ಮ ಪಕ್ಷದಲ್ಲಿ ಸುಮಾರು ಏಳೆಂಟು ಜನ ಅಭ್ಯರ್ಥಿಗಳು ಲೋಕಸಭೆಗೆ ಸ್ಪರ್ಧಿಸಲು ಆಕಾಂಕ್ಷಿಗಳಿದ್ದಾರೆ. ಆಕಾಂಕ್ಷಿಗಳ ಪಟ್ಟಿಯನ್ನು ಕೇಂದ್ರ ಹಾಗೂ ರಾಜ್ಯ ಸಮಿತಿಗೆ ನೀಡುತ್ತೇನೆ. ಹೈಕಮಾಂಡ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸಂಸದನಾಗಿ ಒಳ್ಳೆಯ ಕೆಲಸ ಮಾಡಿದ ತೃಪ್ತಿ ನನಗಿದೆ. ಸಂಸದರ ನಿಧಿ ನಮ್ಮ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಬಳಕೆಯಾಗಿದೆ. ನನ್ನ ಅವಧಿಯಲ್ಲಿ ಎಲ್ಲ ಸಮುದಾಯಕ್ಕೂ ಭವನಗಳನ್ನು ನಿರ್ಮಿಸಿಕೊಟ್ಟಿದ್ದೇನೆ. ಶ್ರೀರಾಮುಲು ಅಂದ್ರೆ ಇವ ನಮ್ಮವ, ಒಳ್ಳೆ ಮನುಷ್ಯ ಎಂಬುದನ್ನು ಜನ ಮಾತಾಡಿಕೊಳ್ಳುತ್ತಿದ್ದಾರೆ ಅಷ್ಟೇ ಸಾಕು. ಬಳ್ಳಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಾಣಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv