ತುಮಕೂರು: ಕೋಟಿ ಕೋಟಿ ಭಕ್ತರನ್ನು ಹೊಂದಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಇಂದು ಶಿವೈಕ್ಯರಾಗಿದ್ದಾರೆ. ಇದೀಗ ನಡೆದಾಡುವ ದೇವರ ಅಗಲಿಕೆಯನ್ನು ಸಹಿಸಿಕೊಳ್ಳಲಾಗದೇ ಮಠದ ಮಕ್ಕಳು ಬಿಕ್ಕಳಿಸಿ ಸುಡುಬಿಸಿಲಿನಲ್ಲಿಯೇ ನಿಂತು ಅಳುತ್ತಿದ್ದಾರೆ.
ಇಂದು ಬೆಳಗ್ಗೆ 11.44ರ ಸುಮಾರಿಗೆ ಶ್ರೀಗಳು ಶಿವೈಕ್ಯವಾಗಿದ್ದರು. ಆದರೆ ಅವರು ತಮ್ಮ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ತಾವು ಮೃತಪಟ್ಟರೆ ಮಕ್ಕಳು ಮಧ್ಯಾಹ್ನದ ಭೋಜನವನ್ನು ಸ್ವೀಕರಿಸಿದ ಬಳಿಕವಷ್ಟೇ ಘೋಷಣೆ ಮಾಡಬೇಕು. ಯಾಕಂದ್ರೆ ಅವರು ಹಸಿವಿನಿಂದ ಇರುವುದು ತಮಗೆ ಇಷ್ಟವಿಲ್ಲ ಎಂದು ಮಠದ ಸಿಬ್ಬಂದಿ ಬಳಿ ತಮ್ಮ ಕೊನೆಯ ಆಸೆಯನ್ನು ಹೇಳಿಕೊಂಡಿದ್ದರು.
ಹೀಗಾಗಿ ಇಂದು ಶ್ರೀಗಳು ಬೆಳಗ್ಗೆ ಶಿವೈಕ್ಯರಾದ್ರೂ ಮಠದ ಸಿಬ್ಬಂದಿ, ಮಕ್ಕಳು ಊಟ ಮಾಡಿದ ಮೇಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಅಂದರೆ ಸುಮಾರು ಮಧ್ಯಾಹ್ನ 1.56ಕ್ಕೆ ವೈದ್ಯರು ಶ್ರೀಗಳು ಸಾವಿನ ವಿಚಾರವನ್ನು ಘೋಷಣೆ ಮಾಡಿದ್ದಾರೆ. ಆದರೆ ಇಷ್ಟು ದಿನ ತಂದೆ, ತಾಯಿ, ಗುರು ಮತ್ತು ದೇವರಾಗಿದ್ದ ಶ್ರೀಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ.
ಇತ್ತ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆಯೇ ಲಕ್ಷಾಂತರ ಭಕ್ತರು ಮಠಕ್ಕೆ ಭೇಟಿ ನೀಡುತ್ತಿದ್ದು, ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡು ಕಣ್ಣೀರಿಡುತ್ತಿದ್ದಾರೆ.
https://www.youtube.com/watch?v=FbJf6G0kt3E
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv