-‘ತಬ್ಲಿಘಿಗಳು ಫ್ರಂಟ್ ಲೈನ್ ವಾರಿಯರ್ಸ್ ಅಲ್ಲ’
ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟಾಗಿದ್ದರೂ ಜನರ ಜೀವ ಉಳಿಸುವ ಉದ್ದೇಶದಿಂದ ಮದ್ಯ ಮಾರಾಟ ಆರಂಭಿಸಿಲ್ಲ. ಈ ವಿಚಾರದಲ್ಲಿ ಇಲ್ಲಿ ರಾಜಕಾರಣ ಸಲ್ಲದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಆಹಾರದ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಬಂದ್ ಬಳಿಕ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ದೆಹಲಿ ನಿಜಾಮುದ್ದೀನ್ ಸಭೆ ಬಳಿಕ ಮತ್ತೆ ಆತಂಕ ಸೃಷ್ಠಿ ಆಯಿತು. ಹೀಗಾಗಿ ತಬ್ಲಿಘಿ ಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಅಂತ ಕರೆಯಲ್ಲ. ಅಲ್ಲದೇ ಕೋವಿಡ್ ಹರಡದಂತೆ ಹಗಲಿರುಳು ಶ್ರಮಿಸುತ್ತಾ, ಅವರ ಕುಟುಂಬವನ್ನು ತೊರೆದು ಸೇವೆ ಮಾಡುತ್ತಿರುವ ಪೊಲೀಸರು, ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪತ್ರಕರ್ತರು ನಿಜವಾದ ಫ್ರಂಟ್ ಲೈನ್ ವಾರಿಯರ್ಸ್ ಎಂದರು.
ಇದೇ ವೇಳೆ ಮಂಡ್ಯದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಿದ ಸಚಿವರು, ಕೊರೊನಾ ಜಾಗೃತಿಯಲ್ಲಿ ಮಾಧ್ಯಮಗಳ ಕಾರ್ಯ ಮಹತ್ವದ್ದಾಗಿದೆ. ರಾಜ್ಯದಲ್ಲಿ ಕಡಿಮೆ ಸಂಖ್ಯೆಯ ಕೊರೊನಾ ಪಾಸಿಟಿವ್ ಬರಲು ಪತ್ರಕರ್ತರು ಸಹ ಕಾರಣರಾಗಿದ್ದಾರೆಂದು ಶ್ಲಾಘಿಸಿದರು.
ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ. ಆಶಾ ಕಾರ್ಯಕರ್ತೆಯರು, ವೈದ್ಯರು ಹಾಗೂ ರಾಜಕಾರಣಿಗಳು ಕೂಡ ಪಕ್ಷಾತೀತವಾಗಿ ಕೊರೊನಾ ವಿರುದ್ಧದ ಸಮರಕ್ಕೆ ಸಿದ್ಧರಾಗಿದ್ದಾರೆ. ವೈದ್ಯರು, ಪೊಲೀಸರು ಹಾಗೂ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ತಡೆಯಲು ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವಂತೆ ಕಾನೂನು ರೂಪಿಸಲಾಗಿದೆ ಎಂದರು.