ಬೆಂಗಳೂರು: ಖಾತೆ ಹಂಚಿಕೆಯಲ್ಲಿ ಆರ್ ಅಶೋಕ್, ಜಗದೀಶ್ ಶೆಟ್ಟರ್, ಸಿಟಿ ರವಿ ಹಾಗೂ ಸೋಮಣ್ಣ ಅಸಮಾಧಾನ ಹೊರ ಹಾಕುತ್ತಿದ್ದಂತೆಯೇ ಇತ್ತ ಈಶ್ವರಪ್ಪ ಮತ್ತು ಶ್ರೀರಾಮುಲು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆದಿದ್ದ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಬಾರಿ ನಿರಾಸೆಯಾಗಿದೆ. ಈಶ್ವರಪ್ಪಗೆ ಡಿಸಿಎಂ ಪೋಸ್ಟ್ ನೀಡದ್ದಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತೆ ಆಕ್ಟೀವ್ ಆಗಿದೆ.
ಇಂಧನ ಖಾತೆ ಕೇಳಿದ್ದ ಈಶ್ವರಪ್ಪಗೆ ಗ್ರಾಮೀಣಾಭಿವೃದ್ಧಿ ಖಾತೆ ನೀಡಿದ್ದಾರೆ. ಈ ಮೂಲಕ ಹಿಂದುಳಿದ ವರ್ಗಕ್ಕೆ ಅಪಮಾನ ಮಾಡಿದ್ದಾರೆಂದು ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈಶ್ವರಪ್ಪರಿಗೆ ಡಿಸಿಎಂ ಹುದ್ದೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಭಾರೀ ಹೊಡೆತ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇತ್ತ ಶ್ರೀರಾಮುಲು ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ಹೊರಹಾಕಿದ್ದಾರೆ. ಶ್ರೀರಾಮುಲು ಒಬ್ಬರೇ ಡಿಸಿಎಂ ಹುದ್ದೆ ಬೇಡಿದ್ದರು. ಆದರೆ ಡಿಸಿಎಂ ಪಟ್ಟ ಕೇಳದವರಿಗೆ ನೀಡಲಾಗಿದೆ. 80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಶ್ರೀರಾಮುಲು ಪ್ರಚಾರ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಶ್ರೀರಾಮುಲು ಅವರೇ ದಯಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇವಲ ಶಾಸಕರಾಗಿರಿ. ಇಡೀ ವಾಲ್ಮೀಕಿ, ಎಸ್ಸಿ, ಎಸ್ಟಿ, ಓಬಿಸಿ ಸಮುದಾಯ ನಿಮ್ಮ ಬೆಂಬಲಕ್ಕಿದೆ ಎಂದು ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಯಡಿಯೂರಪ್ಪ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಅಭಿಮಾನಿಗಳು, ವಾಲ್ಮೀಕಿ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನವನ್ನು ನೀಡಿದ್ದೀರಿ. ಈ ಜಾತಿ ರಾಜಕಾರಣ ಹೆಚ್ಚು ದಿನ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧವೂ ಶ್ರೀರಾಮುಲು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.