ಉಡುಪಿ: ರಾಜ್ಯ ಚುನಾವಣಾ ಆಯೋಗ ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿದೆ ಎಂದು ಮಾಜಿ ಡಿವೈಎಸ್ಪಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನುಪಮಾ ಶೆಣೈ ಆರೋಪಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ತುಣುಕೊಂದರಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಕಾಂಗ್ರೆಸ್ ಬೆಂಬಲಿಗ ಎಂದು ಶೆಣೈ ಆರೋಪಿಸಿದ್ದಾರೆ. ರಾಜ್ಯದಲ್ಲಿ ಇವಿಎಂ ಬಗ್ಗೆ ಕಾಂಗ್ರೆಸ್ ಗೆ ಗೊಂದಲವಿರದು. ಯಾಕೆಂದರೆ ಮುಖ್ಯ ಚುನಾವಣಾ ಅಧಿಕಾರಿಯವರೇ ಕಾಂಗ್ರೆಸ್ ಬೆಂಬಲಿಗರಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಇವಿಎಂ ಬಗ್ಗೆ ವ್ಯಕ್ತಪಡಿಸಿದ್ದ ಅನುಮಾನ ರಾಜ್ಯದಲ್ಲಿ ಕಾಣಸಿಗದು. ಏಕೆಂದರೆ ರಾಜ್ಯದಲ್ಲಿ ಚುನಾವಣಾಧಿಕಾರಿಯವರೇ ಕಾಂಗ್ರೆಸ್ ಆಡಳಿತಕ್ಕೆ ಬರುವಂತಾಗಲು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ಸೇತರ ಪಕ್ಷದ ದೂರನ್ನು ಸಂಜೀವ್ ಕುಮಾರ್ ವಿಲೇವಾರಿ ಮಾಡುತ್ತಿಲ್ಲ ಎಂಬ ಆರೋಪ ಆರೋಪ ಮಾಡಿದ್ದಾರೆ.
ಅಲ್ಲದೇ ಸ್ವತಃ ತಾವೇ ಇಬ್ಬರು ಅಧಿಕಾರಿಗಳು ಕಾಂಗ್ರೆಸ್ ಪರ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದಾಖಲೆ ಸಮೇತ ದೂರು ನೀಡಿದ್ದೆ. ಆದರೆ ಅದನ್ನು ಇದುವರೆಗೂ ವಿಲೇವಾರಿ ನಡೆಸಿಲ್ಲ ಎಂದು ದೂರಿದ್ದಾರೆ. ಸದ್ಯ ಶೆಣೈ ಅವರು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ಸೇತರ ಪಕ್ಷದ ನಾಯಕರಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.