ಮಂಡ್ಯ: ಕ್ಷೇತ್ರದ ರಾಜಕಾರಣ ರಾಜ್ಯದ ಜನರ ಗಮನ ಸೆಳೆದಿದ್ದು, ಜಿದ್ದಿನ ರಾಜಕಾರಣಕ್ಕೆ ದಾರಿ ಮಾಡಿದೆ. ಇದರ ನಡುವೆಯೇ ಸುಮಲತಾ ಅವರ ಪರ ಪ್ರಚಾರಕ್ಕೆ ತೆರಳಿದ್ದ ನಟ ದರ್ಶನ್ ಅವರ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಕ್ಷೇತ್ರದ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಬೆಳ್ಳೂರಿನಿಂದ ನಾಗಮಂಗಲ ಕಡೆ ಬರುತ್ತಿರುವಾಗ ಕೃತ್ಯ ನಡೆದಿದೆ. ದರ್ಶನ್ ಪ್ರಚಾರ ವಾಹನ ಮೇಲೆ ಕಲ್ಲು ತೂರಿದ ವೇಳೆ ಪೊಲೀಸ್ ವಾಹನ ಕೂಡ ಜಖಂಗೊಂಡಿದೆ. ರಸ್ತೆ ಬದಿ ನಿಂತಿದ್ದ ಕಿಡಿಗೇಡಿಗಳಿಂದ ಕೃತ್ಯ ಮಡೆದಿದೆ.
ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಈ ವೇಳೆ ಸಿಎಂ ಪರ ಜೈಕಾರ ಕೂಗಿದ್ದು, ಕೆಲ ದಿನಗಳ ಹಿಂದೆ ನಿಖಿಲ್ ಬೆಂಬಲಿಗ ವಾಹನಕ್ಕೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ದರ್ಶನ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಿಂದ ದರ್ಶನ್ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯ ಪ್ರವೇಶ ಮಾಡಿ ಲಾಠಿ ಬೀಸಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದೆ.
ಇತ್ತ ಪ್ರಚಾರದ ವೇಳೆ ಅಭಿಮಾನಿಯೊಬ್ಬ ದರ್ಶನ್ ಅವರ ಕೈ ಹಿಡಿದು ಎಳೆದಾಡಿದ್ದು, ಪರಿಣಾಮ ಅಪಘಾತದಿಂದ ಗಾಯಗೊಂಡಿದ್ದ ಕೈಯಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಅಭಿಮಾನಿಗಳ ನೂಕು ನುಗ್ಗಲಿನಿಂದಾಗಿ ದರ್ಶನ್ ಬಲಗೈಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.