ಹಾವೇರಿ: ಶೌಚಾಲಯದ ಮೇಲೆ ಬಿದ್ದಿದ್ದ ಚೆಂಡನ್ನು ತರುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ವಿನಾಯಕ ಪ್ರೌಢಶಾಲೆಯಲ್ಲಿ ನಡೆದಿದೆ.
ಸಂತೋಷ ಲಮಾಣಿ (12) ಮೃತ ವಿದ್ಯಾರ್ಥಿಯಾಗಿದ್ದಾನೆ. ಬಾಲಕ ಮೂಲತಃ ಶಿಗ್ಗಾಂವಿ ತಾಲ್ಲೂಕಿನ ದುಂಡಸಿ ತಾಂಡಾದ ನಿವಾಸಿಯಾಗಿದ್ದು, ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುತ್ತಿರುವುವಾಗ ಚೆಂಡು ಶಾಲಾ ಶೌಚಾಲಯದ ಮೇಲೆ ಬಿದ್ದಿದೆ. ಇದನ್ನು ತರಲು ಕಟ್ಟಡ ಹತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.