ಕೊಪ್ಪಳ: ನೆಚ್ಚಿನ ಶಾಲಾ ಶಿಕ್ಷಕನನ್ನು ಅಮಾನತು ಮಾಡಿದ್ದಕ್ಕೆ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಚಂದ್ರಶೇಖರ್ ಜಾಪಾಳ ಅಮಾತುಗೊಂಡ ಶಿಕ್ಷಕರಾಗಿದ್ದಾರೆ. ಇವರು ವಿದ್ಯಾರ್ಥಿಗಳಿಂದ ಮನೆ ಕೆಲಸವನ್ನು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಂದ್ರಶೇಖರ್ ರವರನ್ನು ಅಮಾನತು ಮಾಡಿದ್ದರು. ಆದರೆ ಇದರಿಂದ ಆಕ್ರೋಶಗೊಂಡ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು, ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.
ಶಾಲೆಯ ಮುಂದಿರುವ ತಿಪ್ಪೆಯನ್ನು ತೆಗೆಯುವ ವಿಚಾರಕ್ಕೆ ಕೆಲವರು ಒತ್ತಡ ಬಳಸಿ, ಸುಳ್ಳು ಆರೋಪ ಮಾಡಿ ಶಿಕ್ಷಕರನ್ನು ಅಮಾನತು ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಕೂಡಲೇ ನಮ್ಮ ಶಿಕ್ಷಕರು ಮರಳಿ ನಮ್ಮ ಶಾಲೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.
ಶಿಕ್ಷಕರನ್ನು ಮರು ನೇಮಕಾತಿ ಮಾಡದಿದ್ದರೆ ಆಗಸ್ಟ್ 15 ರಂದು ನಡೆಯುವ ಧ್ವಜರೋಹಣವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿದ್ಯಾರ್ಥಿಗಳು ಬಿಸಿ ಮುಟ್ಟಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews