ಚಾಮರಾಜನಗರ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮನ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣದ ಎರಡನೇ ಆರೋಪಿ ಅಂಬಿಕಾ ಜಾಮೀನು ಅರ್ಜಿ ಸಲ್ಲಿಸಿದ್ದಾಳೆ.
ಈ ಹಿಂದೆ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಜಾಮೀನು ಸಿಕ್ಕಿರಲಿಲ್ಲ. ಈಗ ಕೇಸಿನ ಎರಡನೇ ಆರೋಪಿ ಅಂಬಿಕಾ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಜಾಮೀನಿಗೆ ಅರ್ಜಿ ಸಲ್ಲಿಸಿ, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾಳೆ. ಇದನ್ನೂ ಓದಿ: ಕೊಪ್ಪಳದಲ್ಲಿ ಮಧುಗಿರಿ ಮೋದಿ ಹುಚ್ಚಾಟ, ಎಫ್ಐಆರ್ ದಾಖಲು
ಸರ್ಕಾರದ ಪರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯನ್ನು ಅ.29ಕ್ಕೆ ನ್ಯಾಯಾಧೀಶರು ಮುಂದೂಡಿದ್ದಾರೆ. 2018 ರ ಡಿ.14 ರಂದು ನಡೆದಿದ್ದ ಈ ದುರಂತದಲ್ಲಿ 17 ಮಂದಿ ಮೃತಪಟ್ಟು, ನೂರಾರು ಮಂದಿ ಅಸ್ವಸ್ಥಗೊಂಡಿದ್ದರು. ವಿಷ ಪ್ರಸಾದ ಸೇವಿಸಿದ ಕೆಲವರು ಈಗಲೂ ಅದರ ಅಡ್ಡ ಪರಿಣಾಮದಿಂದ ನರಳುತ್ತಿರುವುದು ಈ ಕೃತ್ಯದ ಭೀಕರತೆಗೆ ಸಾಕ್ಷಿಯಾಗಿತ್ತು.