ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಬೆಂಬಲ ಕೊಟ್ಟಿದ್ದೇವೆ. ಈಗ ಸಂಸದೆ ಸುಮಲತಾ ಅಂಬರೀಶ್ ಅವರು ನಮಗೆ ಬೆಂಬಲ ಕೊಡಲೇ ಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಸುಮಲತಾ ಬೆಂಬಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಈ ಸುಮಲತಾ ಬೆಂಬಲ ಕೊಡಲೇ ಬೇಕು. ಏಕೆಂದರೆ ನಾವು ಬೆಂಬಲ ಕೊಟ್ಟಿದ್ದೆವು. ಹೀಗಾಗಿ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.
ಬೆಂಬಲಿಸಿ ಎಂದು ನಾವು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ. ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಈಗ ಏನು ಬದಲಾವಣೆ ಆಗಿದೆಯೋ ಗೊತ್ತಿಲ್ಲ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಎಂದರೆ ಸುಳ್ಳು, ಸುಳ್ಳು ಎಂದರೆ ಸಿದ್ದರಾಮಯ್ಯ. ಅನ್ನ ಭಾಗ್ಯ ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಅದು ಕೇಂದ್ರ ಸರ್ಕಾರದ ಯೋಜನೆ, ಕೇಂದ್ರ ಸರ್ಕಾರ ಅದಕ್ಕೆ ಹಣ ನೀಡಿದೆ. ಕೇಂದ್ರದ ಯೋಜನೆಯನ್ನು ನನ್ನದು ಎನ್ನುತ್ತಾರೆ. ಅವರದು ಸ್ವಂತ ಸಾಧನೆ ಏನೆಂದು ಹೇಳಲಿ ಎಂದು ಸವಾಲು ಹಾಕಿದರು.
ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ, ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪತನದಲ್ಲಿದೆ. ಈ ಅಧಃಪತನಕ್ಕೆ ಸಿದ್ದರಾಮಯ್ಯ ನವರ ಕೊಡುಗೆ ಅಪಾರ. ನಿಜಕ್ಕೂ ಅವರಿಗೆ ನಾವು ಅಭಿನಂದನೆ ಸಲ್ಲಿಸಬೇಕು ಎಂದು ಹರಿಹಾಯ್ದರು.