ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡ ಪರ ಇಂದು ಮಾಜಿ ಸಿಎಂ ಯಡಿಯೂರಪ್ಪ ರೋಡ್ ಷೋ ನಡೆಸಿ ಮತಯಾಚಿಸಿದರು.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿದ ಬಿಎಸ್ ಯಡಿಯೂರಪ್ಪ ನಗರದ ಮುತ್ಯಾಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮುತ್ಯಾಲಮ್ಮ ದೇವಾಲಯದಿಂದ ಹಳೆಯ ಬಸ್ ನಿಲ್ದಾಣದವರೆಗೂ ರೋಡ್ ಶೊ ನಡೆಸಿ ಮತಯಾಚನೆ ನಡೆಸಿದರು.
ಈ ವೇಳೆ ಅಭ್ಯರ್ಥಿ ಬಚ್ಚೇಗೌಡ, ಶಾಸಕ ಎಸ್.ಆರ್ ವಿಶ್ವನಾಥ್, ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಹಿಂದಿನ ಭಾರೀ ಚಿಕ್ಕಬಳ್ಳಾಪುರದಲ್ಲಿ ಕಡಿಮೆ ಅಂತರದಲ್ಲಿ ಸೋಲನ್ನು ಕಂಡಿದ್ದೇವು. ಆದರೆ ಈ ಬಾರಿ ಬಚ್ಚೇಗೌಡರ ಮೇಲೆ ಜನರಿಗೆ ಅನುಕಂಪ ಹಾಗೂ ಮೋದಿ ಅಲೆಯಿಂದ ಗೆದ್ದೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೊತೆಗೆ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮತ್ತೆ ಪುನರುಚ್ಚಾರ ಮಾಡಿದ ಯಡಿಯೂರಪ್ಪ ಮಂಡ್ಯದಲ್ಲಿ ಸುಮಲತಾ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ತಿಳಿಸಿದರು.