ಮಂಡ್ಯ: ದಿನ ದಿನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ರಂಗೇರುತ್ತಲೇ ಇದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ. ಈ ನಡುವೆ ಇದೀಗ ಸುಮಲತಾ ಎಂಬ ಹೆಸರಿನ ನಾಲ್ಕು ಅಭ್ಯರ್ಥಿಗಳು ಮಂಡ್ಯ ಚುನಾವಣೆ ಕಣದಲ್ಲಿದ್ದಾರೆ.
ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾದ ದಿನದಿಂದಲೂ ಮಂಡ್ಯ ಕ್ಷೇತ್ರ ಪ್ರತಿ ದಿನ ಸದ್ದು ಮಾಡುತ್ತಿದೆ. ಹಾಗೆಯೇ ಚುನಾವಣಾ ಅಭ್ಯರ್ಥಿಗಳ ಹೆಸರಿನಿಂದ ಮಂಡ್ಯ ಸುದ್ದಿಯಾಗಿದೆ. ಹೌದು, ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಒಂದೇ ಹೆಸರಿನ 4 ಮಂದಿ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ವಿಶೇಷವೇನೆಂದರೆ ಸುಮಲತಾ ಎನ್ನುವ ಹೆಸರಿನವರೇ ಸ್ಪರ್ಧೆ ಮಾಡುತ್ತಿದ್ದಾರೆ.
ಸುಮಲತಾ ಹೆಸರಿನ ಅಭ್ಯರ್ಥಿಗಳು:
1. ಸುಮಲತಾ ಅಂಬರೀಶ್
2. ಕೆಆರ್ ಪೇಟೆ ತಾಲೂಕಿನ ಗೊರವಿ ಗ್ರಾಮದ ಎಂ.ಸುಮಲತಾ
3. ರಾಮನಗರ ಜಿಲ್ಲೆಯ ಕನಕಪುರದ ಪಿ.ಸುಮಲತಾ
4. ಶ್ರೀರಂಗಪಟ್ಟಣ ತಾಲೂಕಿನ, ಟಿಎಂ ಹೊಸೂರು ಗ್ರಾಮದ ಸುಮಲತಾ
ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡೋಕೆ ಸುಮಲತಾ ಎಂಬ ಹೆಸರಿನ ಮೂರು ಮಂದಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತುಗಳು ಮಂಡ್ಯದಲ್ಲಿ ಕೇಳಬರತೊಡಗಿವೆ. ಇದರಿಂದ ಸುಮಲತಾ ಅಂಬರೀಶ್ ಅವರಿಗೆ ಬೀಳುವ ಮತಗಳು ವಿಭಜನೆಯಾಗಿ, ಅವರನ್ನು ಚುನಾವಣೆಯಲ್ಲಿ ಸೋಲಿಸಲು ಈ ತಂತ್ರ ಮಾಡಲಾಗಿದೆ ಎನ್ನಲಾಗುತ್ತಿದೆ.
ಈ ಬಾರಿ ಮಂಡ್ಯ ಕ್ಷೇತ್ರದತ್ತ ಇಡೀ ರಾಜ್ಯವೇ ನೋಡುತ್ತಿದೆ. ಮಂಡ್ಯದಲ್ಲಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಿದ್ದಾರೆ.