ನವದೆಹಲಿ: ಮಹದಾಯಿ ನ್ಯಾಯಾಧಿಕರಣದ 2014 ಮತ್ತು 2018ರ ಹೈ ತೀರ್ಪು ನಿರ್ದೇಶನಗಳನ್ನು ಪಾಲಿಸಿ ಕಾಮಗಾರಿ ಆರಂಭಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ಕಣಿವೆ ವ್ಯಾಪ್ತಿಯಲ್ಲಿ ಕಾಮಗಾರಿ ಆರಂಭಿಸಲು ಅನುಮತಿ ನೀಡದಂತೆ ಗೋವಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನ್ಯಾ. ಡಿ ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅನುಮತಿ ಪಡೆಯಲು ಸೂಚಿಸಿದೆ.
ಇದಕ್ಕೂ ಮುನ್ನ ಗೋವಾ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ, ಗೆಜೆಟ್ ನೋಟಿಫಿಕೇಷನ್ ಆಗುತ್ತಿದ್ದಂತೆ ಕರ್ನಾಟಕ ಕಾಮಗಾರಿ ಆರಂಭಿಸಲು ಮುಂದಾಗಿದೆ. ಕೂಡಲೇ ಕಾಮಗಾರಿ ಆರಂಭಿಸುವುದಾಗಿ ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕರ್ನಾಟಕದ ಈ ನಡೆ ನೋಡಿದರೆ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ. ವಾಸ್ತವದಲ್ಲಿ ಸೆಪ್ಟೆಂಬರ್, ಅಕ್ಟೊಬರ್ ನಲ್ಲಿ ಕಳಸ ನಾಲೆಯಲ್ಲಿ ಕಾಮಗಾರಿ ಆರಂಭಿಸಿದೆ. ಮಹದಾಯಿ ಕಣಿವೆ ವ್ಯಾಪ್ತಿಯಲ್ಲಿ ಐದು ಪಕ್ಷಿಧಾಮಗಳಿದ್ದು ಸುಪ್ರೀಂಕೋರ್ಟ್ ಅಂತಿಮ ತೀರ್ಪಿನವರೆಗೂ ಕಾಮಗಾರಿ ನಡೆಸಲು ಅವಕಾಶ ನೀಡದಂತೆ ಮನವಿ ಮಾಡಿದರು.
ಈ ವೇಳೆ ವಾದ ಮಂಡಿಸಿದ ಕರ್ನಾಟಕದ ವಕೀಲರು ನಾವು ನಿಯಮಗಳನ್ನೇ ಪಾಲಿಸಿಯೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ನ್ಯಾಯಾಧಿಕರಣದ ನಿರ್ದೇಶನಗಳನ್ನು ಪಾಲಿಸಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿ ಅರ್ಜಿ ವಿಲೀವಾರಿ ಮಾಡಿತು. ಬಳಿಕ ಮಾತನಾಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಸಮಗ್ರ ಯೋಜನಾ ವರದಿ(ಡಿಪಿಆರ್) ಸಲ್ಲಿಸಿ ಸಂಬಂಧಿಸಿದ ಇಲಾಖೆಗಳ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸುವುದಾಗಿ ಹೇಳಿದರು.
ನ್ಯಾಯಾಧಿಕರಣ ನಿರ್ದೇಶನಗಳೇನು?
* ಕಾಮಗಾರಿಗೂ ಮುನ್ನ ಡಿಪಿಆರ್ ಸಲ್ಲಿಸಬೇಕು
* ಕೇಂದ್ರ ಸರ್ಕಾರದಿಂದ ಯೋಜನೆಗೆ ಅನುಮತಿ ಪಡೆಯಬೇಕು
* ಅರಣ್ಯ ಮತ್ತು ಪರಿಸರ ಇಲಾಖೆ, ವನ್ಯಜೀವಿ ಸಂರಕ್ಷಣಾ ಇಲಾಖೆ ಸೇರಿ ಯೋಜನೆಗೆ ಅಗತ್ಯವಿರುವ ಇಲಾಖೆಗಳ ಒಪ್ಪಿಗೆ ಪಡೆದುಕೊಂಡು ಕಾಮಗಾರಿ ಆರಂಭಿಸಬೇಕು.
* ಈ ಅನುಮತಿ ಪಡೆಯದೆ ಕಾಮಗಾರಿ ಆರಂಭಿಸುವಂತಿಲ್ಲ ನೀರು ಬಳಕೆ ಮಾಡುವಂತಿಲ್ಲ