ಮಧ್ಯ ಪ್ರದೇಶ ಹೈಡ್ರಾಮಾ ಮುಂದುವರಿಕೆ – ಸಿಎಂ, ರಾಜ್ಯಪಾಲ, ಸ್ಪೀಕರ್‌ಗೆ ಸುಪ್ರೀಂ ನೋಟಿಸ್

Public TV
2 Min Read
Supreme Court

– ಬುಧವಾರ ಬೆಳಗ್ಗೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಮಧ್ಯಪ್ರದೇಶದಲ್ಲಿ ಹೈಡ್ರಾಮಾ ಮುಂದುವರಿದಿದ್ದು, ಸುಪ್ರೀಂ ಕೋರ್ಟ್ ಸಹ ವಿಶ್ವಾಸ ಮತಯಾಚನೆ ಕುರಿತ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಅಷ್ಟೇ ಅಲ್ಲದೆ ರಾಜ್ಯದ ಪ್ರಮುಖರಿಗೆ ನೋಟಿಸ್ ಜಾರಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಲ್ಲಿಸಿರುವ ಅರ್ಜಿಯನ್ನು ಬುಧವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ವಿಶ್ವಾಸ ಮತಯಾಚನೆ ಅಗತ್ಯ ಎಂಬುದನ್ನು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟರು. ಇದರ ಜೊತೆಗೆ ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್, ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಕಮಲ್‍ನಾಥ್ ಹಾಗೂ ರಾಜ್ಯಪಾಲ ಲಾಲ್‍ಜಿ ಟಂಡನ್ ಅವರಿಗೆ ನೋಟಿಸ್ ಜಾರಿ ಮಾಡಿದರು.

ರಾಜ್ಯಪಾಲರು ಸೋಮವಾರವೇ ವಿಶ್ವಾಸ ಮತಯಾಚನೆಯಾಗಬೇಕೆಂದು ಸೂಚಿಸಿದ್ದರು. ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಸ್ಪೀಕರ್ ಅಧಿವೇಶನವನ್ನು ಮಾರ್ಚ್ 26ರ ವರೆಗೆ ಮುಂದೂಡಿದರು. ಇದರ ಮಧ್ಯೆಯೇ ಬಿಜೆಪಿ ಸುಪ್ರಿಂ ಕೋರ್ಟ್ ಮೊರೆ ಹೋಗಿತ್ತು.

madhya pradesh

ಸ್ಪೀಕರ್ ಈ ಕ್ರಮ ಕೈಗೊಳ್ಳುತ್ತಿದ್ದಂತೆ ರಾಜ್ಯಪಾಲರು ಮತ್ತೊಂದು ಪತ್ರ ಬರೆದು, ಮಂಗಳವಾರ ವಿಶ್ವಾಸ ಮತಯಾಚನೆಯಾಗಲೇಬೇಕು. ಇಲ್ಲವಾದಲ್ಲಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಮಲ್‍ನಾಥ್, ಎಲ್ಲ ಸಂಗತಿಗಳನ್ನು ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿಮ್ಮ ನಿರ್ದೇಶನವನ್ನು ವಿಧಾನಸಭೆ ಸ್ಪೀಕರ್‍ಗೆ ಕಳುಹಿಸಿದ್ದೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಆರು ಸಚಿವರ ರಾಜೀನಾಮೆ ಅಂಗೀಕಾರ
ಕಾಂಗ್ರೆಸ್ಸಿನ 22 ಶಾಸಕರ ರಾಜೀನಾಮೆ ಪೈಕಿ ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಮಧ್ಯಪ್ರದೇಶದ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅವರು ಶನಿವಾರ ಅಂಗೀಕರಿಸಿದ್ದಾರೆ. ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರ ಸಿಂಗ್ ಸಿಸೋಡಿಯಾ, ಪ್ರಭುರಾಮ್ ಚೌಧರಿ, ಪ್ರದುಮನ್ ತೋಮರ್, ತುಳಸಿರಾಮ್ ಸಿಲಾವತ್ ಹಾಗೂ ಇಮಾರ್ತಿ ದೇವಿ ಅವರನ್ನು ರಾಜ್ಯಪಾಲರು ಸಚಿವ ಸಂಪುಟದದಿಂದ ವಜಾ ಮಾಡಿದ್ದಾರೆ.

ಇತ್ತೀಚೆಗಷ್ಟೇ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದರು. ಅವರೊಂದಿಗೆ ಸಿಂಧಿಯಾ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ನಂತರ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದರು. ಒಟ್ಟು 22 ಶಾಸಕರ ರಾಜೀನಾಮೆಯಿಂದ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. 230 ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಇಬ್ಬರು ಶಾಸಕರ ನಿಧನದಿಂದ ಸದ್ಯ 228 ಶಾಸಕರಿದ್ದಾರೆ. ಸದ್ಯ 22 ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸಿಎಂ ಕಮಲನಾಥ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಈಗ ಸದನದಲ್ಲಿ 206 ಶಾಸಕರಿದ್ದು ಬಹುಮತ ಸಾಧಿಸಲು 104 ಶಾಸಕರ ಬೆಂಬಲ ಬೇಕಿದೆ. ಬಿಜೆಪಿ ಬಳಿ 107 ಶಾಸಕರಿದ್ದರೆ, ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.

mp madhya pradesh mlas

ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *