ಗಾಂಧೀನಗರ: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಕ್ಕಾಗಿ ಸೂರತ್ ಮೂಲದ ಉದ್ಯಮಿಗೆ ಶುಕ್ರವಾರ ಕೆಲವು ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಬಂದಿದೆ. ಉದ್ಯಮಿಗೆ ಬೆದರಿಕೆ ಹಾಕಿದ್ದ ಮೂವರನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ್ದ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದರಿಂದ ಉದ್ಯಮಿಗೆ 7 ವ್ಯಕ್ತಿಗಳಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ಸೂರತ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ
ಸೂರತ್ ಪೊಲೀಸರು ಬಂಧಿಸಿರುವ ಮೂವರು ಆರೋಪಿಗಳು ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಹಾಗೂ ಮಹಿಳಾ ಆರೋಪಿ ಆಲಿಯಾ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಬಂಧಿತ ಎಲ್ಲಾ ಆರೋಪಿಗಳು ಸೂರತ್ ಮೂಲದವರಾಗಿದ್ದು, ಇನ್ನುಳಿದ ನಾಲ್ವರು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಗತ್ ಸಿಂಗ್ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ
ಬಿಜೆಪಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಗದ್ದಲಕ್ಕೆ ಕಾರಣರಾದರು. ನೂಪುರ್ ಅವರನ್ನು ಬೆಂಬಲಿಸಿದ್ದಕ್ಕೆ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಹತ್ಯೆಯೂ ನಡೆಯಿತು. ಅಂದಿನಿಂದ ನೂಪುರ್ ಅವರನ್ನು ಬೆಂಬಲಿಸಿದ ಹಲವರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ವರದಿಯಾಗಿದೆ.