ಬೆಂಗಳೂರು: ರಾಜ್ಯದ 7 ಕೋಟಿ ಜನರ ಸಮೀಕ್ಷೆ ನಡೆಸುವುದು ಹಾಗೂ ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು:
ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ, ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
ಸೆ.22ರಿಂದ ಅ.7ರವರೆಗೆ ಸಮೀಕ್ಷೆ:
ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಲಾಗಿದ್ದು, ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು ಎಂದರು.
ದೂರುಗಳಿಗೆ ಆಸ್ಪದವಿಲ್ಲದಂತೆ ಮುನ್ನೆಚ್ಚರಿಕೆ:
ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು. ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ ಭೌತಿಕವಾಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದು ತೀರ್ಮಾನಿಸಲಾಯಿತು.
ಸಮೀಕ್ಷೆ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚನೆಗೆ ತೀರ್ಮಾನ:
ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸಭೆಯಲ್ಲಿ ಸೂಚಿಸಿದರು. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತೀರ್ಮಾನ ಮಾಡಲಾಯಿತು.
ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು:
ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕೆಂದು ತೀರ್ಮಾನಿಸಲಾಯಿತು.
ಸಮೀಕ್ಷೆಗೆ 1.65 ಲಕ್ಷ ಗಣತಿದಾರರು:
ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು.
ಉಪಜಾತಿಗಳನ್ನು ನಿಖರವಾಗಿ ನಮೂದಿಸಲೂ ಸೂಚನೆ:
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು. ಆರ್ಥಿಕ, ಸಾಮಾಜಿಕ ಪರಿಸ್ಥಿತಿಗಳ ಸ್ಥಿತಿಗತಿ ಕುರಿತು ಕರಾರುವಾಕ್ಕಾದ ಸಮೀಕ್ಷೆ ನಡೆಯುವ ಅವಶ್ಯಕತೆ ಇದ್ದು, ಉಪಜಾತಿಗಳನ್ನು ನಿಖರವಾಗಿ ನಮೂದಿಸಬೇಕು ಎಂದು ಸೂಚಿಸಿದರು
ವರ್ಗ ಮತ್ತು ಜಾತಿರಹಿತ ಸಮಾಜದ ನಿರ್ಮಾಣ ಅಗತ್ಯ:
ವರ್ಗ ರಹಿತ, ಜಾತಿರಹಿತ ಸಮಾಜ ನಿರ್ಮಾಣ ಆಗಬೇಕು. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆಯ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವ ಕಾಳಜಿಯಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ವರದಿ ಆಧರಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದು ತಿಳಿಸಿದರು.
ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.