ಬೆಂಗಳೂರು:ಪರಪ್ಪನ ಅಗ್ರಹಾರ(Parappana Agrahara)ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದ (Serial Bomb Blast) ಶಂಕಿತ ಉಗ್ರ ಅಬ್ದುಲ್ ಖಾದರ್ (60) ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.
ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆಯವನಾದ ಅಬ್ದುಲ್ ಖಾದರ್ (Abdul Khader) 2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳದಿಂದ (NIA) ಬಂಧಿತನಾಗಿದ್ದನು. 2010ರಿಂದ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದನು.
ಇಂದು ಜೈಲಿನಲ್ಲಿದ್ದ ಅಬ್ದುಲ್ ಖಾದರ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತ್ತು. ತೀವ್ರ ಅಸ್ವಸ್ಥಗೊಂಡ ಆತನನ್ನು ಜೈಲಿನ ಸಿಬ್ಬಂದಿ ತಕ್ಷಣವೇ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲೇ ಆತನಿಗೆ ತೀವ್ರ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾನೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಅಬ್ದುಲ್ ಖಾದರ್ ಮೇಲಿನ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಅಂತಿಮ ಹಂತಕ್ಕೆ ತಲುಪಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಈತನಿಗೆ ಸಂಬಂಧಿಸಿದಂತೆ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಯಿತ್ತು. ಆದರೆ ನ್ಯಾಯಾಲಯದಿಂದ ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಮೊದಲೇ ಶಂಕಿತ ಉಗ್ರ ಸಾವನ್ನಪ್ಪಿದ್ದಾನೆ.
ಮೃತನ ದೇಹವನ್ನು ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ಅಬ್ದುಲ್ ಖಾದರ್ ಕುಟುಂಬದ ಸದಸ್ಯರಿಗೆ ಅಧಿಕೃತ ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
