ಹೈದರಾಬಾದ್: ನ್ಯಾಯಾಲಯದ ನಿರ್ಬಂಧದ ನಡುವೆಯೂ ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯ ಮತ್ತೊಂದು ಹೊಸ ವೀಡಿಯೋವನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಮಾಜಿ ಬಿಜೆಪಿ ನಾಯಕ ಹಾಗೂ ಶಾಸಕ ಟಿ. ರಾಜಾಸಿಂಗ್ ಅವರನ್ನು ಮತ್ತೆ ಬಂಧಿಸಲಾಗಿದೆ.
ಪ್ರವಾದಿ ಮುಹಮ್ಮದ್ ಅವರ ಮೇಲಿನ ಟೀಕೆಗಳ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ಗಂಟೆಗಳ ನಂತರ ಅವರು ಮಂಗಳವಾರ ಜಾಮೀನು ಪಡೆದಿದ್ದರು. ಇದೀಗ ಮತ್ತೆ ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದ ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಆತನನ್ನು ಬಂಧಿಸಲಾಗಿದ್ದು, ಚೆರ್ಲಪಲ್ಲಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಎರಡು ದಿನಗಳ ಹಿಂದಷ್ಟೇ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜಾ ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿತ್ತು.
ಅದಾದ ಬಳಿಕ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯ ರಾಜಾ ಸಿಂಗ್ ಅವರ ಬಿಡುಗಡೆಗೆ ಆದೇಶಿಸಿತ್ತು.