ಮುಂಬೈ: ಪ್ರತಿಷ್ಠಿತ ಐಸಿಸಿ ಏಕದಿನ ಟಿ20 ವಿಶ್ವಕಪ್ ಟೂರ್ನಿಯ ನಿರ್ಣಾಯಕ ಘಟ್ಟದಲ್ಲಿದ್ದು, ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು ಎದುರಾಗುತ್ತಿವೆ ಅಂದ್ರೆ ಸಾಕು ಕ್ಷಣಕ್ಷಣವೂ ಮೈ ರೋಮಾಂಚನವಾಗುತ್ತದೆ. ದೇಶದ ಮೂಲೆ ಮೂಲೆಯಲ್ಲಿರುವ ಕ್ರಿಕೆಟ್ ಅಭಿಮಾನಿಗಳು (Cricket Fans) ಈ ಪಂದ್ಯಗಳನ್ನ ಕಣ್ತುಂಬಿಕೊಳ್ಳೋದಕ್ಕೆ ತುದಿಗಾಲಿನಲ್ಲಿ ಕಾಯುತ್ತಿರುತ್ತಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಾತ್ರ ಏಕೆ ಇಷ್ಟೊಂದು ಕ್ರೇಜ್ ಹೆಚ್ಚಾಗಿದೆ? ಎಂಬುದನ್ನಿಲ್ಲಿ ತಿಳಿಯೋಣ. ಇದನ್ನೂ ಓದಿ: ಮ್ಯಾಚ್ನಲ್ಲಿ ಪಾಕ್ ಆಟಗಾರರ ಜೊತೆ ಹ್ಯಾಂಡ್ಶೇಕ್ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್ ಹೇಳಿದ್ದೇನು?

ಇತಿಹಾಸ ರೋಚಕ..?
ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರದಿಂದ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿದೆ. 1947-48 ರಲ್ಲಿ ರಾಜ ಹರಿಸಿಂಗ್ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್ ಯುದ್ಧ (Indo Pak War) ನಡೆಯಿತು. ಆ ನಂತರ 1965 ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971 ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್ ಯುದ್ಧದ ನಂತರವೂ ಭಾರತ ಮತ್ತು ಪಾಕ್ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು. ಆದ್ರೆ ರಾಜತಾಂತ್ರಿಕ ಸಂಬಂಧ ಮುಂದುವರಿದಿತ್ತು. 2025 ರ ಏಪ್ರಿಲ್ನಲ್ಲಿ ನಡೆದ ಪೆಹಲ್ಗಾಮ್ ದಾಳಿ ಅದಕ್ಕೆ ಪ್ರತೀಕಾರವಾಗಿ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ಪಾಕ್ ಜೊತೆಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವಂತೆ ಮಾಡಿತು.

ನೆನಪಿದೆಯಾ ಆ ಕರಾಳ ದಿನ..?
2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್ಗಳಲ್ಲಿ ದಾಳಿ ನಡೆಸಲಾಗಿತ್ತು.

ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದಾದ ಬಳಿಕ 2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಪಾಕ್ ಉಗ್ರರು, ಭಾರತೀಯ ಯೋಧರನ್ನು ಭೀಕರವಾಗಿ ಬಾಂಬ್ ದಾಳಿಯಲ್ಲಿ ಕೊಂದರು. 2025 ಏ.22 ರಂದು ಪಹಲ್ಗಾಮ್ಗೆ ನುಗ್ಗಿದ್ದ ಪ್ರವಾಸಿಗರು ಏಕಾಏಕಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದು ಇನ್ನಷ್ಟು ಭಾರತೀಯರ ನಿದ್ದೆಗೆಡಿಸಿದೆ.

2016 ರಲ್ಲಿ ಭಾರತಕ್ಕೆ ಬಂದಿದ್ದ ಪಾಕ್ ಈಡನ್ ಗಾರ್ಡನ್ನಲ್ಲಿ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್ ತಂಡ ನೀಡಿದ್ದ 119 ರನ್ಗಳ ಗುರಿಯನ್ನು 18 ಓವರ್ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್ಗಳಲ್ಲೇ ಈ ಗುರಿ ಪೂರೈಸಿತ್ತು. ಕೊನೆಯದ್ದಾಗಿ ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ನಲ್ಲಿ ಪಾಲ್ಗೊಳ್ಳೋದಕ್ಕೂ ಸಹ ಪಾಕ್ ಭಾರತಕ್ಕೆ ಬಂದಿತ್ತು. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕ್ ಹೀನಾಯ ಸೋಲು ಕಂಡಿತ್ತು. ಆಪರೇಷನ್ ಸಿಂಧೂರ್ ಬಳಿಕ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನವನ್ನ 3 ಪಂದ್ಯಗಳಲ್ಲು ಬಗ್ಗು ಬಡಿದು ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ವಿಶ್ವಕಪ್ನಲ್ಲಿ ಹುರಿದು ಮುಕ್ಕಲು ಸಜ್ಜಾಗಿದೆ.

