ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶವೊಂದು ಈಗ ವಿವಾದಕ್ಕೆ ಕಾರಣವಾಗಿದೆ.
ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಮುದ್ರಾಧಾರಣೆ, ಜಯಂತಿ ಆಚರಣೆ ಮಾಡುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ನವೆಂಬರ್ 2ರಂದು ಆದೇಶ ಹೊರಡಿಸಲಾಗಿದೆ.
ಇವುಗಳೆಲ್ಲಾ ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಇವುಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ತಪ್ಪಿದಲ್ಲಿ ಅಂಥವರ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಈ ಆದೇಶಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದು ಅಸಂಬದ್ಧ ಆದೇಶ. ಇದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಮಾಧ್ವ ತತ್ವದ ಅನುಯಾಯಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೋದಿ ಬೆಂಗಳೂರು ಡೈರಿ: ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಯಾವೆಲ್ಲ ರಸ್ತೆಗಳು ಬಂದ್?
ತ್ರಿಮತಸ್ಥ ಬ್ರಾಹ್ಮಣ ಪಂಗಡಗಳ ನಡುವೆ ಒಡಕು ಮೂಡಿಸುವ ಪಿತೂರಿ ನಡೆಯುತ್ತಿದೆ. ದೇಗುಲಗಳಲ್ಲಿ ಆಚಾರ್ಯರ ಜಯಂತಿ ನಡೆಸಿದರೆ ತಪ್ಪೇನು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ವಿಶೇಷವಾಗಿ ಕರಾವಳಿ ಭಾಗದ ದೇವಾಲಯಗಳಲ್ಲಿ ಈ ಆದೇಶದಿಂದ ಸಮಸ್ಯೆ ಆಗುತ್ತದೆ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಈ ಬಗ್ಗೆ ಕೇಳಿದರೆ ನನಗೆ ಈ ಆದೇಶದ ಬಗ್ಗೆ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.