ನವದೆಹಲಿ: 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಬಂಧಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಗುಜರಾತ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ತಮ್ಮ ಜಾಮೀನು ಅರ್ಜಿಯನ್ನು ದೀರ್ಘಾವಧಿಗೆ ಮುಂದೂಡಿದ ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸೆಟಲ್ವಾಡ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ತ್ರಿ ಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು: ಮೋದಿ
ತೀಸ್ತಾ ಕಸ್ಟಡಿ ವಿಚಾರಣೆ ಪೂರ್ಣಗೊಂಡಿರುವುದರಿಂದ ಗುಜರಾತ್ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಿತ್ತು. ಆದರೆ ಪ್ರಕರಣದ ವಿಚಾರಣೆ ಬಾಕಿ ಇರುವಾಗ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೇ ಅಥವಾ ಇಲ್ಲವೇ ಎಂಬುದನ್ನು ನಾವು ಪರಿಗಣಿಸುವುದಿಲ್ಲ. ಅದನ್ನು ಹೈಕೋರ್ಟ್ ನಿರ್ಧರಿಸಲಿ. ಅಂತಹ ಅರ್ಜಿಗಳು ಬಾಕಿ ಇರುವಾಗ ಮಾಧ್ಯಂತರ ಜಾಮೀನು ನೀಡಲು ಅವಕಾಶಗಳಿವೆ. ಹೀಗಾಗಿ ನಾವು ಮಧ್ಯಂತರ ಜಾಮೀನು ನೀಡುತ್ತಿದ್ದೇವೆ ಎಂದು ಕೋರ್ಟ್ ಹೇಳಿದೆ.
ಜಾಮೀನು ನೀಡುವ ವೇಳೆ ಮುಂದೆಯೂ ತನಿಖೆಗೆ ಸಹಕರಿಸಬೇಕು. ಹೈಕೋರ್ಟ್ಗೆ ಪಾಸ್ಪೊರ್ಟ್ ಒಪ್ಪಿಸಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನ ಮಾಡಬಾರದು ಎಂದು ಷರತ್ತು ವಿಧಿಸಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಹಾಂಕಾಂಗ್ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ