ಇಸ್ಲಮಾಬಾದ್: ಸದ್ಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಏರಲು ಸಿದ್ಧವಾಗುತ್ತಿದ್ದಂತೆ ಈಗ ಕಾಶ್ಮೀರಕ್ಕೆ ನೀಡಿಲಾಗಿರುವ ವಿಶೇಷ ಸ್ಥಾನಮಾನ ಬದಲಾಯಿಸುವ ವಿಚಾರದ ಬಗ್ಗೆ ಪಾಕ್ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ವಿರೋಧಿಸಿದೆ.
ಭಾರತ ಆಕ್ರಮಿತ ಕಾಶ್ಮೀರದಲ್ಲಿ ಈಗ ಏನಿದೆಯೋ ಅದೇ ರೀತಿ ಮುಂದುವರಿಯಬೇಕು. ಇದನ್ನು ಬದಲಾಯಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರವನ್ನು ಉಲ್ಲಂಘಿಸುವಂತಿಲ್ಲ ಎಂದು ಪಾಕ್ ಹೇಳಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಡಾ. ಮುಹಮ್ಮದ್ ಫೈಝಾಲ್ ಮಾಧ್ಯಮಗಳ ಜೊತೆ ಮಾತನಾಡಿ, ಭಾರತ ಪಾಕ್ ನಡುವೆ ಇರುವ ಜಮ್ಮು-ಕಾಶ್ಮೀರದ ವಿವಾದಗಳ ಬಗ್ಗೆ ವಿಶ್ವಸಂಸ್ಥೆಯ ಮೇಲ್ವಿಚಾರಣೆಯಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡದ ಹೊರತು ಯಾವುದೇ ನಿರ್ಧಾರವನ್ನು ಕೈಗೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರ ನಾಗರಿಕರಿಗೆ ವಿಶೇಷ ಅಧಿಕಾರ ನೀಡುವ ಕಲಂ 35 ಎ ಅನ್ನು ರದ್ದು ಪಡಿಸಲು ಬದ್ಧರಾಗಿದ್ದೇವೆ ಎಂದು ಬಿಜೆಪಿ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಡುಗಡೆ ಮಾಡಿದ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅದರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಜಯಗಳಿಸಿದ್ದು, ಸತತ ಎರಡನೇ ಬಾರಿಗೆ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ.