ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಗಾಳಿ ಒತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಎರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ. ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕಡೆ ಜಾಸ್ತಿ ಮಳೆ ಆಗುವ ಸಂಭವವಿದೆ. ಕಳೆದೆರಡು ದಿನಗಳಿಂದ ರಾಜಧಾನಿಯ ಕೆಲವಡೆ ತುಂತುರು ಮಳೆಯಾಗುತ್ತಿದ್ದು, ಶುಕ್ರವಾರ ಸಂಜೆ 9.30 ರಿಂದ ರಾತ್ರಿ 11ರ ವರೆಗೆ ಬೆಂಗಳೂರಿನ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ.
ಗುರುವಾರ ತಡರಾತ್ರಿ ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ವಿಧಾನಸೌಧ, ಶಿವಾಜಿನಗರ, ಕೆ.ಆರ್.ಸರ್ಕಲ್ ಸೇರಿ ಇತರೇ ಪ್ರದೇಶಗಳಲ್ಲಿ ಮಳೆಯಾಗಿತ್ತು. ಹಾಗೆಯೇ ಶುಕ್ರವಾರ ಶಿವಾನಂದ ವೃತ್ತ, ಮೆಜೆಸ್ಟಿಕ್, ಚಾಲುಕ್ಯ ವೃತ್ತ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರ, ರಾಜಾಜಿನಗರ, ಆನಂದ್ ರಾವ್ ವೃತ್ತ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇಂದು ಕೂಡ ರಾಜಧಾನಿಯಲ್ಲಿ ತಂಪಾದ ಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣವಿದೆ.
ಅರಬ್ಬೀ ಸಮುದ್ರದಲ್ಲಿ ಗಾಳಿಯ ಒತ್ತಡ ಕಡಿಮೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದೇ ವಾತಾವರಣ ಮುಂದುವರಿದರೇ ಇನ್ನೂ ಎರಡು ದಿನಗಳ ಕಾಲ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv