ಮಡಿಕೇರಿ: ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಅತಿವೇಗವಾಗಿ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರು, ಬೈಕ್ನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿ ಪಿಕ್ಅಪ್ ವಾಹನಕ್ಕೆ ಅಪ್ಪಳಿಸಿದೆ. ಇದರಿಂದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಸ್ವಿಫ್ಟ್ ಕಾರು ಚಾಲಕ ರತನ್ ಅಲಿಯಾಸ್ ಉಣ್ಣಿ ಹಾಗೂ ಮಡಿಕೇರಿ ಅರಣ್ಯ ಇಲಾಖೆಯ ವಾಚ್ಮೆನ್ ಕುಮಾರ್ ಸೇರಿದ್ದಾರೆ ಎಂದು ತಿಳಿದುಬಂದಿದೆ. ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರೆಲ್ಲ ಗುಡ್ಡೆಹೊಸೂರಿನ ಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ತೆರಳಿ ವಾಪಸ್ಸಾಗುತ್ತಿದ್ದರು ಎಂದು ತಿಳಿದುಬಂದಿದೆ.
ಸ್ವಿಫ್ಟ್ ಕಾರಿನಲ್ಲಿದ್ದ ಸುವಿನ್, ಆದರ್ಶ್, ಚಂದ್ರಶೇಖರ್ ಹಾಗೂ ಅಜಯ್ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಮಡಿಕೇರಿ ಹಾಗೂ ಮೈಸೂರಿಗೆ ರವಾನಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಶಾಲನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಾಗೂ ಗಾಯಾಳುಗಳ ಮಾಹಿತಿ ಕಲೆಹಾಕುತ್ತಿದ್ದಾರೆ.

