– ಓರ್ವ ಬಾಲಕನ ಸ್ಥಿತಿ ಗಂಭೀರ; ರಸ್ತೆಯಲ್ಲಿ ಬಿದ್ದಿದ್ದ ಯುವತಿರನ್ನು ಹೊತ್ತು ಸಾಗಿದ ಆಪ್ತರು
ಬೆಂಗಳೂರು: ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ಸಂಭ್ರಮಾಚರಣೆ ವೇಳೆ ಅವಘಡಗಳು ಸಂಭವಿಸಿವೆ. ಆರ್ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಜನಸಾಗರದ ನಡುವೆ ನೂಕುನುಗ್ಗಲು ಏರ್ಪಟ್ಟು ಕಾಲ್ತುಳಿತಕ್ಕೆ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಓರ್ವ ಮಹಿಳೆ ಮತ್ತು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ.
ಅಸ್ವಸ್ಥಗೊಂಡು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬನಿಗೆ ಅಲ್ಲೇ ಇದ್ದವರು ಸಿಪಿಆರ್ ಮಾಡಿ ಎಚ್ಚರಗೊಳಿಸಲು ಯತ್ನಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಎತ್ತಿಕೊಂಡು ಅಂಬುಲೆನ್ಸ್ ಕಡೆಗೆ ಓಡುತ್ತಿರುವ ದೃಶ್ಯ ಕಂಡುಬಂತು.
ನೂಕುನುಗ್ಗಲಲ್ಲಿ ಗಾಯಗೊಂಡಿದ್ದ ಇಬ್ಬರು ಯುವತಿಯರನ್ನು ಆಪ್ತರು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯವೂ ಕಂಡುಬಂತು. ಹೆಚ್ಚಿನ ಸಂಖ್ಯೆಯಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಹಲವರು ಮರದ ಮೇಲೆ ಏರಿ ಕುಳಿತಿದ್ದರು. ಇನ್ನೂ ಕೆಲವರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್, ಬಿಬಿಎಂಪಿ ಕಸದ ಲಾರಿಯನ್ನೇ ತಡೆದು ಅದರ ಮೇಲೇರಿ ಕಿರಿಕಿರಿ ಉಂಟು ಮಾಡಿದರು.