ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ.
ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ಮೆಕ್ಕಾದಿಂದ ಬೆಂಗಳೂರಿಗೆ ವಾಪಸಾಗಿ ಅಲ್ಲಿಂದ ಶಿವಮೊಗ್ಗ ನಗರಕ್ಕೆ ಬಂದಿರುತ್ತಾರೆ. ಇವರು ಬಹಳ ವರ್ಷಗಳಿಂದ ಉಸಿರಾಟಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು, ವೈದ್ಯರ ಸಲಹೆ ಮೇರೆಗೆ ಮಣಿಪಾಲ್ನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೋಗಿಯೂ ವಿದೇಶ ಪ್ರವಾಸ ಕೈಗೊಂಡ ಮಾಹಿತಿ ಹಿನ್ನೆಲೆಯಲ್ಲಿ ಕೆಎಂಸಿ ವೈದ್ಯರು, ಸದರಿ ಮಹಿಳೆಯ ಗಂಟಲು ಮಾದರಿ ದ್ರವವನ್ನು ಗುರುವಾರ ಸಂಗ್ರಹಿಸಿ ಪರೀಕ್ಷೆಗಾಗಿ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿರುವ ವಿಆರ್ಡಿಎಲ್ ಲ್ಯಾಬ್ಗೆ ಕಳುಹಿಸಿದ್ದರು. ಇಂದು ಮುಂಜಾನೆ ಕೋವಿಡ್-19 ಪರೀಕ್ಷೆ ಫಲಿತಾಂಶ ನೆಗೆಟಿವ್ ಎಂದು ಬಂದಿದೆ ಎಂದು ವರದಿ ನೀಡಿದ್ದಾರೆ. ಈ ಕುರಿತು ಸಾರ್ವಜನಿಕರು ಅನಾವಶ್ಯಕ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.