ರಾಮನಗರ: ಸಿಎಂ ತಮ್ಮ ಸ್ವಕ್ಷೇತ್ರ ಬೊಂಬೆನಗರಿ ಚನ್ನಪಟ್ಟಣಕ್ಕೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪ್ರವಾಸವನ್ನ ಹಮ್ಮಿಕೊಂಡಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸ್ವಕ್ಷೇತ್ರದತ್ತ ಮುಖ ಮಾಡಿಲ್ಲ ಎಂದು ಸಾರ್ವಜನಿಕರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ತಾಲೂಕು ಆಡಳಿತ ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಕಾರ್ಯಗಳಿಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು 17 ಹಾಗೂ ಮಂಗಳವಾರ ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿವಾರು ಜನತಾದರ್ಶನ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ.
ಚನ್ನಪಟ್ಟಣ ತಾಲೂಕಿನ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ ಬೆಳಗ್ಗೆ 10 ಗಂಟೆಗೆ, ಕೋಡಂಬಳ್ಳಿ ಜಿಲ್ಲಾ ಪಂಚಾಯ್ತಿನಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ 4 ಗಂಟೆಗೆ ಜನತಾದರ್ಶನ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಬೇವೂರು, ಮಧ್ಯಾಹ್ನ 2 ಗಂಟೆಗೆ ಮಳೂರು ಹಾಗೂ ಸಾಯಂಕಾಲ ಚನ್ನಪಟ್ಟಣ ಟೌನ್ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.