ಬೆಂಗಳೂರು: ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಲು ರಚಿಸಿರೋ ಸಮನ್ವಯ ಸಮಿತಿಯ ಮೊದಲ ಸಭೆ ಇಂದು ನಡೆಯಲಿದೆ. ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಡಿಸಿಎಂ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರ ರಚನೆಯಾದ ಬಳಿಕ ಮೊದಲ ಸಮನ್ವಯ ಸಮಿತಿ ಸಭೆ ಇದಾಗಿದ್ದು, ಮೊದಲ ಸಭೆಯಲ್ಲಿ ಯಾವೆಲ್ಲ ನಿರ್ಧಾರಗಳು ಆಗ್ತವೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಸರ್ಕಾರ ಗೊಂದಲವಿಲ್ಲದೆ ನಡೆಯಬೇಕು. ಎರಡು ಪಕ್ಷಗಳ ಕನಿಷ್ಠ ಕಾರ್ಯಕ್ರಮಗಳ ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಹಾಗೂ ಮುಂದಿನ ಲೋಕಸಭೆ ಚುನಾವಣೆ ಮೈತ್ರಿ ಸೇರಿದಂತೆ ಹಲವು ವಿಷಯಗಳು ಇಂದಿನ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದ್ದು, ಸಭೆ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ಚರ್ಚೆಯಾಗಲಿರುವ ಪ್ರಮುಖ ವಿಷಯಗಳು:
ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮಗಳ ಜಾರಿ, ಹಿಂದಿನ ಸರ್ಕಾರದ ಘೋಷಿತ ಯೋಜನೆಗಳ ಮುಂದುವರಿಕೆ ಬಗ್ಗೆ, ರೈತರ ಸಾಲಮನ್ನಾ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಎರಡು ಪಕ್ಷಗಳ ಪ್ರಣಾಳಿಕೆಯಲ್ಲಿನ ಭರವಸೆಗಳ ಜಾರಿ ಸಂಬಂಧ, ನೂತನ ಬಜೆಟ್ ಮಂಡನೆ ಸಿದ್ಧತೆ ಬಗ್ಗೆ ಹಾಗೂ ಸಂಪುಟ ವಿಸ್ತರಣೆ ಗೊಂದಲ, ಬಾಕಿ ಉಳಿದ ಸಚಿವ ಸ್ಥಾನಗಳ ಭರ್ತಿ ಸಂಬಂಧಗಳ ಕುರಿತು ಮಾತುಕತೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿಗಳ ನೇಮಕದ ಬಗ್ಗೆ ಮತ್ತು ನಿಗಮ -ಮಂಡಳಿಗಳ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳೀವೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.