ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಾವು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ದಿನವಾದ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಶಾಸಕಿಯಾಗಿ ಆಯ್ಕೆಯಾದ ದಿನ ನನಗೆ ಮರುಜನ್ಮವಾಗಿದ್ದು, ಜನರಿಗೋಸ್ಕರ ಈ ಹುಟ್ಟು ಹಬ್ಬ ಎಂದು ಹೇಳಿ ಇಂದು ಹುಟ್ಟು ಹಬ್ಬವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಆಚರಿಸಿದ್ದಾರೆ. ಈ ಮೂಲಕ ಕ್ಷೇತ್ರದ ಜನರಿಗೆ ಇನ್ನಷ್ಟು ಹತ್ತಿರವಾಗುವ ಪ್ರಯತ್ನವನ್ನು ಹೆಬ್ಬಾಳ್ಕರ್ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಗಣೇಶ್ ಪುರದಲ್ಲಿರುವ ಹುಕ್ಕೇರಿ ಮಠಕ್ಕೆ ಭೇಟಿ ನೀಡಿದ ಹೆಬ್ಬಾಳ್ಕರ್ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.
ಮಠದ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕಿ, ಫೆ. 14ರಂದು ನನ್ನ ಹುಟ್ಟುಹಬ್ಬ, ಆದರೆ ಇದೇ ಮೊದಲ ಬಾರಿಗೆ ನಾನು ಶಾಸಕಿಯಾಗಿ ಆಯ್ಕೆಯಾಗಿದ್ದು ಇದು ನನ್ನ ಮರುಹುಟ್ಟು. ಹೀಗಾಗಿ ನನ್ನ ಹುಟ್ಟುಹಬ್ಬದ ದಿನವನ್ನು ಮುಂದೂಡಿ ಮೇ 12 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ. ಶಾಸಕಿಯಾಗಿ ಆಯ್ಕೆಯಾಗಿದ್ದು ನನಗೆ ಮರುಜನ್ಮ, ನನ್ನ ಕ್ಷೇತ್ರದ ಜನರಿಗೋಸ್ಕರ ಇವತ್ತು ನನ್ನ ಹುಟ್ಟುಹಬ್ಬ ಎಂದು ಘೋಷಿಸಿಕೊಂಡು ಇಂದು ಆಚರಿಸಿಕೊಂಡಿದ್ದೇನೆ ಎಂದು ತಮ್ಮ ಖುಷಿಯನ್ನು ಹಂಚಿಕೊಂಡರು.