ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಮನೆಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಭೂಕುಸಿತದಲ್ಲಿ ಸಿಲುಕಿದ ಘಟನೆ ನಡೆದಿದೆ.
ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ಭೂಕುಸಿತ ಸಂಭವಿಸಿದೆ. ಕಸಬಾ ಓಣಿಯ ನಿವಾಸಿ ಮಹಾಂತೇಶಗೌಡ, ಪ್ರಭುಗೌಡ ಅವರ ಮನೆ ಮುಂಭಾಗದಲ್ಲಿ ಭೂಮಿ ಕುಸಿದಿದೆ. ಪರಿಣಾಮ ಆ ಸ್ಥಳದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮಣ್ಣಿನಡಿ ಸಿಲುಕಿಕೊಂಡಿತ್ತು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯರು ಆಳಕ್ಕೆ ಇಳಿಯುತ್ತಿದ್ದ ಟ್ರ್ಯಾಕ್ಟರ್ನನ್ನು ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಇದನ್ನೂ ಓದಿ:ದಿಢೀರ್ ಭೂಕುಸಿತ – 10 ಅಡಿ ಗುಂಡಿಯಲ್ಲಿ ಸಿಲುಕಿಕೊಂಡ ವ್ಯಕ್ತಿಯ ರಕ್ಷಣೆ
2 ವಾರದ ಹಿಂದೆ ಕೂಡ ನರಗುಂದ ಕಸಬಾ ಓಣಿಯಲ್ಲಿ ಭೂಕುಸಿತವಾಗಿತ್ತು. ಈ ವೇಳೆ ರತ್ನಾಕರ ದೇಶಪಾಂಡೆ ಎಂಬವರು ಗುಂಡಿಯಲ್ಲಿ ಸಿಲುಕಿಕೊಂಡಿದ್ದರು. ರತ್ನಾಕರ ಅವರು ತಮ್ಮ ಮನೆಯ ಹಿತ್ತಲಿನಲ್ಲಿ ಹೂ ಕಿತ್ತು ತರುವ ವೇಳೆ ದಿಢೀರ್ ಭೂ ಕುಸಿತವಾಗಿತ್ತು. ಪರಿಣಾಮ ರತ್ನಾಕರ ಅವರು ಸುಮಾರು 10 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರ ನರಳಾಟ, ಕೂಗಾಟ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಬಂದು ರಕ್ಷಣೆ ಮಾಡಿದ್ದರು.
ದೇಶಪಾಂಡೆ ಅವರನ್ನು ಏಣಿ ಹಾಗೂ ಹಗ್ಗದ ಮೂಲಕ ಮೇಲೆ ಎತ್ತಿದ್ದರು. ನರಗುಂದ ಪಟ್ಟಣದಲ್ಲಿ ಕಳೆದ ಒಂದು ತಿಂಗಳಲ್ಲಿ ಸುಮಾರು 15 ಕಡೆಗಳಲ್ಲಿ ಭೂಕುಸಿತವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ.