ಬೆಳಗಾವಿ: ರಾಜ್ಯ ಸರ್ಕಾರ (Karnataka Government) ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿಗಳು (CM Siddaramaiah) ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿಯಿಂದ (Heavy Rain) ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ (Draught) ಛಾಯೆ ಇದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ ಎಂದು ಆರೋಪಿಸಿದರು.
ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ ಕೊಡಬೇಕು, ಅದನ್ನು ಇದುವರೆಗೂ ನೀಡಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಸರ್ಕಾರ ಇದನ್ನು ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ. ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದನ್ನೂ ಓದಿ: ನನ್ನ ಆತ್ಮಗೌರವಕ್ಕೆ ಧಕ್ಕೆಯಾದ್ರೆ ರಾಜೀನಾಮೆ ಕೊಡುತ್ತೇನೆ ಅಂತ ಹೇಳಿರೋದು ನಿಜ : ಬಿ.ಆರ್ ಪಾಟೀಲ್
ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ. ರಾಜ್ಯ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದರು.
ನಮ್ಮ ಸರ್ಕಾರದ ಸಮಯದಲ್ಲಿ ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ರೂ. ಪರಿಹಾರ ನೀಡಿದ್ದೇವೆ. ಆ ರೀತಿಯ ಮಾನದಂಡ ಅನುಸರಿಸಿ ಈಗಲೂ ಪರಿಹಾರ ನೀಡಬೇಕು. ತಕ್ಷಣವೇ ಸಂತ್ರಸ್ತರಿಗೆ 10 ಸಾವಿರ ಪರಿಹಾರ ಕೊಡಬೇಕು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ನಾವು ಕೊಟ್ಟಂತೆ ಈಗಲೂ ಕೊಡಬೇಕು. 2600 ಕೋಟಿ ರೂ. ಪರಿಹಾರ ನಾವು ಒಂದೇ ತಿಂಗಳಲ್ಲಿ ನೀಡಿದ್ದೇವೆ. ಕೇಂದ್ರ ಸರ್ಕಾರ ಒಣ ಬೇಸಾಯಕ್ಕೆ 6,500 ರೂ. ಪರಿಹಾರ ನೀಡಿತ್ತು, ನಾವು ಅದಕ್ಕೆ 13 ಸಾವಿರ ರೂ. ನೀಡಿದ್ದೆವು. ನೀರಾವರಿ ಆಧಾರಿತ ಜಮೀನಿಗೆ 15 ಸಾವಿರ ರೂ. ನೀಡಿದ್ದರೆ ನಾವು 25 ಸಾವಿರ ರೂ. ಪರಿಹಾರ ನೀಡಿದ್ದೆವು.
ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ 18 ಸಾವಿರ ರೂ. ನೀಡಿದರೆ ನಾವು 28 ಸಾವಿರ ರೂ. ಪರಿಹಾರ ಕೊಟ್ಟಿದ್ದೆವು. ಅದೇ ಮಾನದಂಡ ಅನುಸರಿಸಿ ಈಗಲೂ ರೈತರಿಗೆ ಪರಿಹಾರ ಕೊಡಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು. ನಮ್ಮ ಅನುಭವದಿಂದ ಹೇಳುತ್ತಿದ್ದೇನೆ, ತಕ್ಷಣವೇ ಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಹಾಗಾಗದಿದ್ದರೆ ಈ ಸರ್ಕಾರ ಇದ್ದರೆಷ್ಟು, ಬಿಟ್ಟರೆಷ್ಟು ನಾವು ಎಸ್ಡಿಆರ್ಎಫ್ ಪರಿಹಾರ ಜೊತೆಗೆ ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ. ಐದು ಲಕ್ಷ ಪರಿಹಾರ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಿಸಲು ಅನುಕೂಲ ಮಾಡಿದ್ದೇವೆ. ಬಿಎಸ್ವೈ ನೇತೃತ್ವದಲ್ಲಿ ತೀರ್ಮಾನ ತೆಗೆದುಕೊಂಡು ಈ ಕ್ರಮ ಕೈಗೊಂಡಿದ್ದೇವೆ. ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ, ಅಲ್ಪ ಬಿದ್ದ ಮನೆಗಳಿಗೆ 3 ಲಕ್ಷ ಪರಿಹಾರ ಕೊಟ್ಟಿದ್ದೇವೆ. ಸಂಕಷ್ಟದಲ್ಲಿರುವ ಪ್ರವಾಹಪೀಡಿತರ ನೆರವಿಗೆ ನಾವು ಬಂದಿದ್ದೆವು. ಇಲ್ಲವಾದರೆ ಈ ಸರ್ಕಾರ ಬಡವರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದರು.
ವರ್ಗಾವಣೆ ದಂಧೆ:
ಈ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಎಲ್ಲರೂ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ, ಇದಕ್ಕಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ವರ್ಗಾವಣೆ ದಂಧೆಯಲ್ಲಿ ಚೌಕಾಸಿ ನಡೆಯುತ್ತಿದೆ ಎಂದು ಬೊಮ್ಮಾಯಿ ಆರೋಪ ಮಾಡಿದರು.
ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದೆ. ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ ಎಂದರು.
ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಪೊಲೀಸರ ಮಾರಣಾಂತಿಕ ಹಲ್ಲೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಸಮಾಜ ಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಅವರಿಗೆ ಪೊಲಿಸರ ಭಯ ಹೋಗಿದೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಹೆಣ್ಣುಮಕ್ಕಳ ಮೇಲೆ ಹಲ್ಲೆ ಆಗುತ್ತದೆ. ಪೊಲೀಸ್ ಅಧಿಕಾರಿಗಳ ಕೊಲೆ ಆಗುತ್ತದೆ, ಮತ್ತೊಂದೆಡೆ ಪೊಲೀಸರಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಎಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]