ತುಮಕೂರು: ಒಂದೂವರೆ ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ತುಮಕೂರು ನಗರದ ರೌಡಿಶೀಟರ್ ಸ್ಟೀಫನ್ ಫರ್ನಾಂಡಿಸ್ನನ್ನು ಪೊಲೀಸರು ಬೆಂಗಳೂರಿನಲ್ಲಿ ಹೆಡೆಮುರಿ ಕಟ್ಟಿದ್ದಾರೆ.
ತುಮಕೂರಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಸ್ಟೀಫನ್ ಫರ್ನಾಂಡಿಸ್ ಅಲಿಯಾಸ್ ಗುಂಡ ರೌಡಿಶೀಟರ್ ಆಗಿದ್ದ. ಒಟ್ಟು 15 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದು, 2015 ರಲ್ಲಿ ನಡೆದ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ ತಲೆಮರೆಸಿಕೊಂಡಿದ್ದ. ಆರೋಪಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆತನ ಮೇಲೆ ಫೈರಿಂಗ್ ಮಾಡಿ ಬಂಧಿಸಲಾಗಿದೆ.
ಬಂಧಿಸಿದ ನಂತರ ಶಸ್ತ್ರಾಸ್ತ್ರಗಳನ್ನು ಇರಿಸಿದ್ದ ಜಾಗಕ್ಕೆ ಸ್ಟೀಫನ್ ಫರ್ನಾಂಡಿಸ್ನನ್ನು ಪೊಲೀಸರು ಕರೆದೊಯ್ದಿದ್ದಾರೆ. ಬಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಲ್ಲಗಟ್ಟ ಸಮೀಪ ಹೋಗುತ್ತಿದ್ದಂತೆ ರೌಡಿಶೀಟರ್ ಸ್ಟೀಫನ್ ಫರ್ನಾಂಡಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಆರೋಪಿ ಗಾಯಗೊಂಡು ಕೆಳಗೆ ಬಿದ್ದಿದ್ದು, ಬಂಧಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅರೋಪಿ ತುಮಕೂರು ನಗರದಲ್ಲಿ ಹಫ್ತಾ ವಸೂಲಿ ಮಾಡಲು ತಂಡ ಕಟ್ಟಿಕೊಂಡಿದ್ದ. ಈತನನ್ನು ಸೆರೆ ಹಿಡಿಯಲು ಸುಮಾರು ಒಂದೂವರೆ ವರ್ಷಗಳಿಂದ ಪೊಲೀಸರು ಬಲೆ ಬೀಸಿದ್ದರು. ನಗರದಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮೂರು ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿತ್ತು. ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸ್ ತಂಡಕ್ಕೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಸ್ಟೀಫನ್ ಫರ್ನಾಂಡಿಸ್ಗೆ ಸಹಾಯ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ನಂತರ ಬೆಂಗಳೂರಿನ ಬಗಲಗುಂಟೆ ಪೊಲೀಸ್ ಠಾಣೆ ಮತ್ತು ಸೋಮ ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ ಸಹಕಾರದೊಂದಿಗೆ ತುಮಕೂರಿನ ಜಯನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.