ತುಮಕೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಬಹುದು ಎಂಬ ಸುದ್ದಿ ನನಗೂ ಬಂದಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಸೇರಿದಂತೆ ವಿವಿಧ ಸ್ಥಾನಗಳಿಗೆ ನೇಮಕ ಶೀಘ್ರದಲ್ಲೇ ಆಗಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವೆಲ್ಲಾ ನಡೆದುಕೊಳ್ಳುತ್ತೇವೆ ಎಂದರು.
ಡಿಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ಸಿಗಬಹುದು ಎಂದು ನನಗೂ ಸುದ್ದಿ ಬಂದಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಶೀಘ್ರದಲ್ಲೇ ಹೆಸರು ಪ್ರಕಟ ಮಾಡುತ್ತಾರೆ ಎಂದು ಹೇಳಿದರು. ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟಿದ್ದು, ನೆರೆಯಲ್ಲಿ 30 ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ಸಿಎಂ ಒಪ್ಪಿಕೊಂಡಿದ್ದಾರೆ. ನಮ್ಮ ರಾಜ್ಯಕ್ಕೆ ಏನು ಬರಬೇಕು ಅಷ್ಟನ್ನು ಮಾತ್ರ ಕೇಂದ್ರದವರು ಕೊಟ್ಟಿದ್ದಾರೆ ಸ್ಪೆಷಲ್ ಗ್ರ್ಯಾಂಟ್ ಕೊಟ್ಟಿಲ್ಲ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಎಸ್ಡಿಪಿಐ ಸಂಘಟನೆ ನಿಷೇಧ ವಿಚಾರದಲ್ಲಿ ಮಾತನಾಡಿದ ಪರಮೇಶ್ವರ್, ಯಾವ ಕಾರಣಕ್ಕೆ ನಿಷೇಧ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ಕಾರಣ ಕೊಡಬೇಕು. ಆ ಕಾರಣವನ್ನು ಗೃಹ ಸಚಿವರು ಹೇಳಬೇಕು ಎಂದು ಒತ್ತಾಯಿಸಿದರು.