ತುಮಕೂರು: ಡಿಕೆ ಸಹೋದರರ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗದ್ಗದಿತರಾಗಿ ಕೈ ಮುಗಿದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಮಾಧುಸ್ವಾಮಿ ಬಳಿ ಬೇಡಿಕೊಂಡ ಘಟನೆ ಇಂದು ಕೆಡಿಪಿ ಸಭೆಯಲ್ಲಿ ನಡೆದಿದೆ.
ಕುಣಿಗಲ್ ಕ್ಷೇತ್ರದ ರಸ್ತೆ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದ 14 ಕೋಟಿ ರೂ ಸರ್ಕಾರದಿಂದ ತಡೆಹಿಡಿಯಲಾಗಿದೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದ್ದು ನನಗೆ ತುಂಬಾ ನೋವಾಗಿದೆ ಎಂದು ಶಾಸಕರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಅಲ್ಲದೆ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಕೆಡಿಪಿ ಸಭೆಯಲ್ಲಿ ಇದ್ದಂತಹ ಉಸ್ತುವಾರಿ ಸಚಿವ ಮಾಧುಸ್ವಾಮಿ ಬಳಿ ಕೈ ಮುಗಿದು ಕೇಳಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಕೆಲ ಕ್ಷೇತ್ರಗಳ ಅನುದಾನಗಳನ್ನು ತಡೆಹಿಡಿಯಲಾಗಿದೆ. ಮುಂದಿನ ಕೆಲ ದಿನದಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಡಾ.ರಂಗನಾಥ್ಗೆ ಭರವಸೆ ನೀಡಿದ್ದಾರೆ.