ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು ನಮಸ್ಕರಿಸಿದ್ದಾರೆ. 65 ಶಿಕ್ಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ಶ್ರೀಗಳ ಗದ್ದುಗೆ ದರ್ಶನ ಮಾಡಿಸಿದ್ದಾರೆ.
ಇತ್ತ ಜನವರಿ 31 ರಂದು ನಡೆಯಲಿರುವ ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆಯ ಸಕಲ ತಯಾರಿ ನಡೆಯುತ್ತಿದೆ. ಭಕ್ತಾದಿಗಳಿಗಾಗಿ ಭಕ್ಷ್ಯ ಭೋಜನ ತಯಾರಾಗುತ್ತಿದೆ. ಎರಡು ಲಕ್ಷ ಜಹಾಂಗೀರ್, 80 ಕ್ವಿಂಟಾಲ್ ಬೋಂದಿ, 50 ಚೀಲ ಮಾಲ್ದಿ ಪುಡಿ ತಯಾರಾಗುತ್ತಿದೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!
ಒಟ್ಟು 65 ಕ್ಕೂ ಹೆಚ್ಚು ಅಡುಗೆ ಭಟ್ಟರು ಮಠದ ಮೂರು ಕಡೆ ತಯಾರಿ ಕಾರ್ಯದಲ್ಲಿ ತೊಡಗಿದ್ದಾರೆ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಠದ ಶಿಕ್ಷಕರಿಂದ ಸ್ವಚ್ಛತಾ ಕಾರ್ಯ ಭರದಿಂದ ಸಾಗುತ್ತಿದೆ. ಸಿದ್ದಗಂಗಾ ವಿದ್ಯಾಸಂಸ್ಥೆ ಶಿಕ್ಷಕರಿಂದ ಮಠದ ಆವರಣದಲ್ಲಿರುವ ಕಲ್ಯಾಣಿ ಸ್ವಚ್ಛತೆ ನಡೆಯುತ್ತಿದೆ. ಹತ್ತಾರು ಶಿಕ್ಷಕರು ಕಲ್ಯಾಣಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಅವರು ಜನವರಿ 21ರ ಸೋಮವಾರ ಲಿಂಗೈಕ್ಯರಾಗಿದ್ದು, ಗುರುವಾರ ಪುಣ್ಯಾರಾಧನೆ ನಡೆಯಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv