ಚೆನ್ನೈ: ಡಿಎಂಕೆ (DMK) ನಾಯಕ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಷಾ (Actress Trisha) ಕುರಿತು ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, (CM Vijay) ಟಿವಿಕೆ ಪಕ್ಷ (TVK Party) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮೊರೆ ಹೋಗಿದೆ. ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷ ಒತ್ತಾಯಿಸಿದೆ.
ಕಾವೇರಿ ನೀರಿನ ವಿಚಾರವಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಜನಸಮೂಹದಿಂದ ‘ತ್ರಿಷಾ’ ಎಂಬ ಘೋಷಣೆ ಕೇಳಿಬಂದ ಬಳಿಕ ಉದಯನಿಧಿ ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ಮಹಿಳೆಯರನ್ನು ಅವಮಾನಿಸುವಂತಿದೆ ಎಂದು ಟಿವಿಕೆ ಆರೋಪಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ, ಉದಯನಿಧಿ ಸ್ಟಾಲಿನ್ ಅವರ ಮಾತುಗಳು ಮಹಿಳೆಯರನ್ನು ವಸ್ತುವಿನಂತೆ ಕಾಣುವ ಮನೋಭಾವವನ್ನು ಉತ್ತೇಜಿಸುತ್ತವೆ. ಸಾರ್ವಜನಿಕ ವೇದಿಕೆಯಲ್ಲಿ ಇಂತಹ ಹೇಳಿಕೆಗಳು ಅಸ್ವೀಕಾರಾರ್ಹ ಎಂದು ಟಿವಿಕೆ ತಿಳಿಸಿದೆ. ಇದನ್ನೂ ಓದಿ: ನಾರಾಯಣಪುರ ಡ್ಯಾಮ್ನಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ
ಉದಯನಿಧಿ ಸ್ಟಾಲಿನ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚನೆ ಮಾಡಬೇಕು. ಮಹಿಳೆಯರ ಘನತೆಗೆ ಧಕ್ಕೆ ತಂದಿರುವ ಆರೋಪದಡಿ ಪೊಲೀಸ್ ಪ್ರಕರಣ ದಾಖಲಿಸಬೇಕು ಎಂದು ಟಿವಿಕೆ ಆಗ್ರಹಿಸಿದೆ. ಈ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪಕ್ಷ ಘೋಷಿಸಿದೆ. ಈ ಹೇಳಿಕೆಗೆ ಬಿಜೆಪಿ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದೆ. ತಮಿಳುನಾಡು ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಮಹಿಳೆಯರ ಬಗ್ಗೆ ಇಂತಹ ಭಾಷೆ ಬಳಸುವುದು ರಾಜಕೀಯ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.
ನಟಿ ತ್ರಿಷಾ ಕುರಿತು ಈ ಹಿಂದೆ ಕೂಡ ಹಲವು ರಾಜಕೀಯ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದವು. ಆದರೆ, ಈ ಹೊಸ ವಿವಾದಕ್ಕೆ ಸಂಬಂಧಿಸಿದಂತೆ ತ್ರಿಷಾ ಅವರಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಏನಿದು ವಿವಾದ?
ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ ʼತ್ರಿಷಾ… ತ್ರಿಷಾ…ʼ ಎಂಬ ಘೋಷಣೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ. ಇದನ್ನೂ ಓದಿ: ಹಳಿ ಮೇಲಿನ ಮಣ್ಣು ತೆರವು ಪೂರ್ಣ – ಸಕಲೇಶಪುರ ಮಾರ್ಗದಲ್ಲಿ ರೈಲು ಸಂಚಾರ ಆರಂಭ
