ಉಡುಪಿ: ಕುಂದಾಪುರ (Kundapura) ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನ ಕಳವು ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20 ರಂದು ಬೆಳಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಾನ್ಸ್ಟೆಬಲ್ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ
ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕ್, ಮೂರು ಮೊಬೈಲ್ ಫೋನ್ಗಳು ಹಾಗೂ ಕಳವು ಮಾಡಲಾದ ದೇವಸ್ಥಾನದ ಕಾಣಿಕೆ ಹುಂಡಿ ಸಹಿತ ಅಂದಾಜು 1.50 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್ ಮರ – ಪ್ರಯಾಣಿಕರು ಜಸ್ಟ್ ಮಿಸ್



