ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ 72 ಗಂಟೆ ಒಳಗಿನ ಕೋವಿಡ್ ನೆಗೆಟಿವ್ ವರದಿಯನ್ನು ತರಬೇಕು ಎಂದು ಜಿಲ್ಲಾಡಳಿತ ನಿರ್ಧಾರ ಮಾಡಿದೆ.
ಉಡುಪಿ ಜಿಲ್ಲೆಗೆ ಸಾಕಷ್ಟು ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಡಿಸಿ ಕೂರ್ಮಾ ರಾವ್ ಪತ್ರಿಕಾಗೋಷ್ಟಿ ನಡೆಸಿ, ನೆಗೆಟಿವ್ ವರದಿ ತಂದ ಬಳಿಕವೂ ಇಲ್ಲಿ ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು. ಕ್ವಾರಂಟೈನ್ ನಂತರ ಮತ್ತೆ ಕೋವಿಡ್ ಟೆಸ್ಟ್ ಮಾಡಿತ್ತೇವೆ. ಮಹಾರಾಷ್ಟ್ರದಿಂದ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದರು.
ಜಿಲ್ಲೆಯಲ್ಲಿ 14 ಚೆಕ್ ಪೋಸ್ಟ್ ರಚನೆ:
ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರ ತಪಾಸಣೆಗಾಗಿ 8 ಚೆಕ್ ಪೋಸ್ಟ್ ಗಳನ್ನು ಈಗಾಗಲೇ ರಚಿಸಲಾಗಿದೆ. ಇನ್ನೂ ಆರು ಚೆಕ್ ಪೋಸ್ಟ್ ಗಳನ್ನು ಹಾಕುತ್ತೇವೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ವಿಳಂಬ- ಕೇಂದ್ರಕ್ಕೆ ಸುಪ್ರೀಂ ತರಾಟೆ
ಮಣಿಪಾಲದ ಡಿಸಿ ಕಚೇರಿಯಲ್ಲಿ ಮಾತನಾಡಿದ ಎಸ್ ಪಿ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕಫ್ರ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕಪ್ರ್ಯೂ ಅವಧಿಯಲ್ಲಿ ತಪಾಸಣೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡದವರಿಗೆ ದಂಡ ಹಾಕುವ ಪ್ರಕ್ರಿಯೆ ಮುಂದುವರಿಯಲಿದೆ. ಚೆಕ್ ಪೋಸ್ಟ್ ಗಳಲ್ಲಿ ಕೂಡ ತಪಾಸಣೆಯನ್ನು ಬಿಗಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.